ನವದೆಹಲಿ: ಕುವೈತ್ನಲ್ಲಿ ಅನಾರೋಗ್ಯಕ್ಕೆ ಈಡಾಗಿ ಆಸ್ಪತ್ರೆಗೆ ದಾಖಲಾಗಿರುವ ಡಿಪಿಎಪಿ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ, ದೂರವಾಣಿ ಮೂಲಕ ಮಾತನಾಡಿದ್ದಾರೆ.
ಪಾಕಿಸ್ತಾನದಿಂದ ಭಯೋತ್ಪಾದನೆಗೆ ಕುಮ್ಮಕ್ಕು ಮತ್ತು ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಿಶ್ವದ ಪ್ರಮುಖ ದೇಶಗಳಿಗೆ ಮನವರಿಕೆ ಮಾಡಿಕೊಡಲು ತೆರಳಿರುವ ನಿಯೋಗದಲ್ಲಿ ಗುಲಾಮ್ ನಬಿ ಆಜಾದ್ ಇದ್ದಾರೆ.
ಆಜಾದ್ ಅವರಿಗೆ ಕರೆ ಮಾಡಿದ್ದ ಮೋದಿ, ಆರೋಗ್ಯದ ಬಗ್ಗೆ ವಿಚಾರಿಸಿದರು. ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನಿಯೋಗದ ನೇತೃತ್ವ ವಹಿಸಿರುವ ಬಿಜೆಪಿ ಸಂಸದ ವೈಜಯಂತ್ ಜಯ್ ಪಾಂಡಾ, ಆಜಾದ್ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಹೇಳಿದ್ದಾರೆ.
ಬಹ್ರೇನ್ ಮತ್ತು ಕುವೈತ್ನಲ್ಲಿ ನಡೆದ ಸಭೆಗಳಲ್ಲಿ ಆಜಾದ್ ಅವರ ಮಾತು ಹೆಚ್ಚು ಪ್ರಭಾವಶಾಲಿಯಾಗಿತ್ತು. ಅವರು ಹಾಸಿಗೆ ಹಿಡಿದಿರುವುದು ನಿರಾಶೆ ಮೂಡಿಸಿದೆ ಎಂದು ಪಾಂಡಾ ಹೇಳಿದ್ದಾರೆ.
ಪಾಕಿಸ್ತಾನದಿಂದ ಭಯೋತ್ಪಾದನೆಗೆ ಪ್ರೋತ್ಸಾಹ ಮತ್ತು ಭಯೋತ್ಪಾದನೆ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಸಂಕಲ್ಪವನ್ನು ತಿಳಿಸಲು ಏಳು ಬಹು ಪಕ್ಷ ನಿಯೋಗಗಳು ವಿವಿಧ ದೇಶಗಳಿಗೆ ತೆರಳಿವೆ.
ಪಾಂಡಾ ನೇತೃತ್ವದ ನಿಯೋಗವು ಸೌದಿ ಅರೇಬಿಯಾ, ಕುವೈತ್, ಬಹ್ರೇನ್ ಮತ್ತು ಅಲ್ಜೀರಿಯಾಗಳಿಗೆ ತೆರಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.