ನವದೆಹಲಿ: ಭಾರತದಲ್ಲಿ ಗಲ್ಫ್ ರಾಷ್ಟ್ರಗಳ ಹೂಡಿಕೆಗೆ ಮತ್ತಷ್ಟು ಅನುಕೂಲವಾಗುವಂತೆ ವಿಶೇಷ ಕಾರ್ಯಪಡೆಯನ್ನು ರಚಿಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕತಾರ್ನ ದೊರೆ ಶೇಖ್ ತಮೀಮ್ ಬಿನ್ ಹಮಾದ್ ಅಲ್ ಥಾನಿ ಅವರು ಮಂಗಳವಾರ ಸಮ್ಮತಿ ಸೂಚಿಸಿದ್ದಾರೆ.
ದೂರವಾಣಿ ಮುಖಾಂತರ ಮಾತುಕತೆ ವೇಳೆ, ಕತಾರ್ ರಾಷ್ಟ್ರೀಯ ದಿನಾಚರಣೆಯ ಶುಭಾಶಯವನ್ನು ಮೋದಿ ಅವರು ಕತಾರ್ ದೊರೆಗೆ ತಿಳಿಸಿದರು ಎಂದು ಪ್ರಧಾನಿ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರತಿಯಾಗಿ, ಕತಾರ್ನಲ್ಲಿರುವ ಭಾರತೀಯ ಸಮುದಾಯವು ಅಲ್ಲಿನ ರಾಷ್ಟ್ರೀಯ ದಿನಾಚರಣೆಯಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿರುವುದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಬಂಡವಾಳ ಹರಿವು ಹಾಗೂ ಇಂಧನ ಭದ್ರತೆ ಕುರಿತು ಇಬ್ಬರೂ ನಾಯಕರು ಚರ್ಚೆ ನಡೆಸಿದ್ದು, ಭಾರತದಲ್ಲಿ ಮತ್ತಷ್ಟು ಬಂಡವಾಳ ಹೂಡಿಕೆ ಮಾಡಲು ಕತಾರ್ ಬಂಡವಾಳ ಪ್ರಾಧಿಕಾರಕ್ಕೆ ಅನುಕೂಲವಾಗುವಂತೆ ವಿಶೇಷ ಕಾರ್ಯಪಡೆ ರಚಿಸಲು ಅವರು ನಿರ್ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.