ನವದೆಹಲಿ: ನವೆಂಬರ್ 5 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕೇದಾರನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಇದೇ ವೇಳೆ, ಮರು ನಿರ್ಮಾಣಗೊಂಡಿರುವ ಆದಿ ಗುರು ಶಂಕರಾಚಾರ್ಯರ ಸಮಾಧಿ ಮತ್ತು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
2013ರ ಪ್ರವಾಹದಲ್ಲಿ ನಾಶವಾಗಿದ್ದ ಶಂಕರಾಚಾರ್ಯರ ಸಮಾಧಿಯನ್ನು ಮರುನಿರ್ಮಾಣ ಮಾಡಲಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯವು ತಿಳಿಸಿದೆ.
ವಿಧಾನಸಭೆ ಚುನಾವಣೆ ನಡೆಯಲಿರುವ ಉತ್ತರಾಖಂಡ ರಾಜ್ಯದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. 130 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದ ಪೂರ್ಣಗೊಂಡಿರುವ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಸಂಗಮ ಘಾಟ್, ಪ್ರಥಮ ಚಿಕಿತ್ಸಾ ಮತ್ತು ಪ್ರವಾಸಿ ಸೌಲಭ್ಯ ಕೇಂದ್ರ, ಆಡಳಿತ ಕಚೇರಿ ಮತ್ತು ಆಸ್ಪತ್ರೆ, ಎರಡು ಅತಿಥಿ ಗೃಹಗಳು, ಪೊಲೀಸ್ ಠಾಣೆ, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಮಂದಾಕಿನಿ ಆಸ್ಥಾಪತ್ ಸೇರಿದಂತೆ 180 ಕೋಟಿ ರೂ.ಗಳ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.
ಸಮಾಧಿಯ ಮರುನಿರ್ಮಾಣವನ್ನು ಉಲ್ಲೇಖಿಸಿರುವ ಪಿಎಂಒ, ಮೋದಿ ಅವರ ಮಾರ್ಗದರ್ಶನದಲ್ಲಿ ಸಂಪೂರ್ಣ ಕೆಲಸವನ್ನು ಕೈಗೊಳ್ಳಲಾಗಿದ್ದು, ಅವರು ನಿರಂತರವಾಗಿ ಅದರ ಪ್ರಗತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.