ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳಿಗೆ ಕೇಂದ್ರದಿಂದ ಮಾತುಕತೆಗೆ ಬಂದಿರುವ ಆಹ್ವಾನಕ್ಕೆ ಸಂಬಂಧಿಸಿದಂತೆ ಸಮಾಲೋಚನೆಗಳು ಆರಂಭವಾಗಿವೆ.
ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಪಕ್ಷದ ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.
ಇದೇ 24ರಂದು ಸಭೆಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ಕೊಟ್ಟಿದ್ದಾರೆ.ಸಭೆಯಲ್ಲಿ ಭಾಗ
ವಹಿಸಬೇಕೇ, ಬೇಡವೇ ಎಂಬುದನ್ನು ಎನ್ಸಿ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮ್ಮದ್ ಸಾಗರ್ ಮತ್ತು ಕಾಶ್ಮೀರದ ಪ್ರಾಂತೀಯ ಅಧ್ಯಕ್ಷ ನಾಸಿರ್ ಅಸ್ಲಂ ವಾನಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಜತೆಗೆ ಚರ್ಚೆ ನಡೆಸಿದ್ದಾರೆ.
‘ಈ ಸಭೆಯ ಬಳಿಕ ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕರ್ ಘೋಷಣೆಯ (ಪಿಎಜಿಡಿ) ಭಾಗವಾಗಿರುವ ಪಕ್ಷಗಳ ಸಭೆ ನಡೆಯಲಿದ್ದು, ಅಲ್ಲಿ ಈ ವಿಷಯದ ಬಗ್ಗೆ ಚರ್ಚಿಸಿ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುತ್ತವೆ’ ಎಂದು ಅಬ್ದುಲ್ಲಾ ಹೇಳಿದ್ದಾರೆ.
ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಎನ್ಸಿ ಇಲ್ಲಿಯವರೆಗೆ ಯಾವುದೇ ರಚನಾತ್ಮಕ ಅಥವಾ ಸಂಘಟಿತ ಸಭೆ ಕರೆದಿಲ್ಲ ಎಂದು ಪಕ್ಷದ ಮುಖಂಡ ವಾನಿ ಹೇಳಿದ್ದಾರೆ.
ಮೆಹಬೂಬಾಗೆ ಅಧಿಕಾರ:
ಪಿಡಿಪಿ ಯಾವ ನಿಲುವು ತಳೆಯಬೇಕು ಎಂಬುದನ್ನು ನಿರ್ಧರಿಸಲು ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯು ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರಿಗೆ ಅಧಿಕಾರ ನೀಡಿದೆ.ಮೆಹಬೂಬಾ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.