ADVERTISEMENT

ವಿಧಾನಸಭೆ ಚುನಾವಣೆ ತಯಾರಿ: ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಮಾರ್ಗದರ್ಶನ

ಏಜೆನ್ಸೀಸ್
Published 21 ಫೆಬ್ರುವರಿ 2021, 9:08 IST
Last Updated 21 ಫೆಬ್ರುವರಿ 2021, 9:08 IST
ಪ್ರಧಾನಿ ನರೇಂದ್ರ ಮೋದಿ (ಪಿಟಿಐ ಚಿತ್ರ)
ಪ್ರಧಾನಿ ನರೇಂದ್ರ ಮೋದಿ (ಪಿಟಿಐ ಚಿತ್ರ)   

ನವದೆಹಲಿ: ನಾಲ್ಕು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಚುನಾವಣೆ ತಯಾರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

‘ಪ್ರಧಾನಿಯವರು ರಾಷ್ಟ್ರೀಯ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾರ್ಗದರ್ಶನ ನೀಡಿದ ನಂತರ, ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳು, ಆತ್ಮನಿರ್ಭರ ಭಾರತ ಅಭಿಯಾನ ಮತ್ತು ಕೃಷಿ ಕಾಯ್ದೆಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ರಾಜ್ಯ ಮಟ್ಟದ ತಂಡಗಳ ಸಭೆಗಳು ಹಾಗೂ ಸಂವಾದಗಳನ್ನು ಆಯೋಜಿಸಲಾಗುತ್ತಿದೆ’ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.

ಹೊಸ ಕೃಷಿ ಕಾಯ್ದೆಗಳ ವಿರುದ್ಧ ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ ಹಾಗೂ ಪಂಜಾಬ್‌ನ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವದ್ದಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಪ್ರತಿಭಟನೆಯನ್ನು ದೇಶದ ಇತರ ಪ್ರದೇಶಗಳಿಗೂ ವಿಸ್ತರಿಸಲು ಹಾಗೂ ಮೋದಿ ಸರ್ಕಾರದ ವಿರುದ್ಧದ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಪ್ರಯತ್ನಿಸುತ್ತಿವೆ. ಈ ಮಧ್ಯೆ, ಪಶ್ಚಿಮ ಬಂಗಾಳ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ಧವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಗೆಲುವು ಸಾಧಿಸುವತ್ತ ಕಣ್ಣಿಟ್ಟಿದೆ.

ಕಳೆದ ವರ್ಷ ಜೆ.ಪಿ.ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಪಕ್ಷದ ನೂತನ ರಾಷ್ಟ್ರೀಯ ಪದಾಧಿಕಾರಿಗಳ ನೇಮಕ ಮಾಡಲಾಗಿತ್ತು. ಆ ಬಳಿಕ ಕೋವಿಡ್–19 ಸಾಂಕ್ರಾಮಿಕದ ಕಾರಣ ಅವರು ಸಭೆ ಸೇರುವುದು ಸಾಧ್ಯವಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.