ಲಖನೌ:ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಪ್ರತಿಭಟನೆಯ ಕಾವು ಇನ್ನೂ ಆರಿಲ್ಲ. ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಈ ಕಾಯ್ದೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಅನೇಕ ಜನರ ಸಾವು ಹಾಗೂ ಆಸ್ತಿಗೆ ಹಾನಿಗೆ ಕಾರಣವಾದ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ಪ್ರತಿಭಟನಕಾರರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
‘ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರ, ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಪೊಲೀಸರೊಂದಿಗಿನ ಅನಾಗರಿಕ ವರ್ತನೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ ಎಂದು ಯುವಕರನ್ನು ಕೇಳಲು ಬಯಸುತ್ತೇನೆ’ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರತಿಮೆ ಅನಾವರಣಗೊಳಿಸಿದ ನಂತರ ನಡೆದ ಸಮಾರಂಭದಲ್ಲಿ ಹೇಳಿದರು.
‘ಭವಿಷ್ಯದ ಪೀಳಿಗೆಗೆ ಉಪಯುಕ್ತವಾಗಿರುವ ಆಸ್ತಿಗಳು ಪ್ರತಿಭಟನಕಾರರ ಆಕ್ರೋಶಕ್ಕೆ ತುತ್ತಾಗಿವೆ. ಉತ್ತಮ ರಸ್ತೆಗಳು ಜನರ ಹಕ್ಕಾಗಿದ್ದರೆ ಅವುಗಳನ್ನು ರಕ್ಷಿಸುವುದೂ ಅವರ ಕರ್ತವ್ಯವಾಗಿದೆ. ಶಿಕ್ಷಣವು ಜನರ ಹಕ್ಕಾಗಿದ್ದರೆ, ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಕರ ಸುರಕ್ಷತೆಯನ್ನು ಖಾತರಿಪಡಿಸುವುದು ಅವರ ಕರ್ತವ್ಯ’ ಎಂದು ಹೇಳುವ ಮೂಲಕ ಪ್ರಧಾನಿಯು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ನಡೆದ ಹಿಂಸಾಚಾರವನ್ನು ಉಲ್ಲೇಖಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.