ನವದೆಹಲಿ: ಜಗತ್ತಿನಲ್ಲಿ ಪ್ರಮುಖ ಬದಲಾವಣೆಗಳಾಗುತ್ತಿದ್ದು, ಉದ್ಯಮ ಬೆಳವಣಿಗೆ ಮತ್ತು ಉದ್ಯೋಗಕ್ಕೆ ಸಾಕಷ್ಟು ಅವಕಾಶಗಳು ದೊರೆಯಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ.
ಪಂಡಿತ್ ದೀನದಯಾಳ್ ಪೆಟ್ರೋಲಿಯಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಸದ್ಯದ ಕೊರೊನಾವೈರಸ್ ಸಾಂಕ್ರಾಮಿಕದ ಪರಿಸ್ಥಿತಿಯಲ್ಲೂ ಆಶಾಭಾವ ವ್ಯಕ್ತಪಡಿಸಿದ್ದಾರೆ.
‘ಇಂದು ನೀವು ಸಾಂಕ್ರಾಮಿಕದ ಸಂದರ್ಭದಲ್ಲಿ ಉದ್ಯಮಕ್ಕೆ ಕಾಲಿಡುತ್ತಿದ್ದೀರಿ. ಇಡೀ ವಿಶ್ವದಲ್ಲೇ ಇಂಧನ ಕ್ಷೇತ್ರದಲ್ಲಿ ಪ್ರಮುಖ ಬದಲಾವಣೆಗಳಾಗುತ್ತಿವೆ. ಈ ಸಮಯದಲ್ಲಿ ಉದ್ಯಮಶೀಲತೆ ಮತ್ತು ಉದ್ಯೋಗಕ್ಕೆ ಅನೇಕ ಅವಕಾಶಗಳಿವೆ’ ಎಂದು ಮೋದಿ ಹೇಳಿದ್ದಾರೆ.
ನಿಮ್ಮ ಕೌಶಲ, ಪ್ರತಿಭೆ, ವೃತ್ತಿಪರತೆಯಿಂದ ನೀವು ಈ ಪರಿಸ್ಥಿತಿಯನ್ನು ಮೆಟ್ಟಿನಿಂತು ಆತ್ಮ ನಿರ್ಭರ ಭಾರತಕ್ಕೆ ಬಲ ತುಂಬಬಲ್ಲಿರಿ ಎಂಬ ವಿಶ್ವಾಸ ನನಗಿದೆ ಎಂದ ಮೋದಿ, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
‘ದೇಶದಲ್ಲಿ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ಶೇ 30–35ರಷ್ಟು ಕಡಿಮೆ ಮಾಡುವ ಗುರಿಯೊಂದಿಗೆ ನಾವು ಮುನ್ನಡೆಯುತ್ತಿದ್ದೇವೆ. ಈ ದಶಕದಲ್ಲಿ ನೈಸರ್ಗಿಕ ಅನಿಲ ಮತ್ತು ಇಂಧನ ಬಳಕೆಯನ್ನು ನಾಲ್ಕು ಪಟ್ಟು ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ’ ಎಂದೂ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.