ನವದೆಹಲಿ: ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಔಷಧ ಕಂಪೆನಿಗಳ ಮುಖ್ಯಸ್ಥರೊಂದಿಗೆ ವರ್ಚುವಲ್ ಸಭೆ ನಡೆಸಿದ್ದಾರೆ.
ಇದಕ್ಕೂ ಮೊದಲು ಅವರು ದೇಶದಾದ್ಯಂತ ಇರುವವೈದ್ಯರೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಇದೇ ವಿಚಾರವಾಗಿ ಮಾತನಾಡಿದ್ದರು.
ಏಪ್ರಿಲ್ 17 ರಂದು ನಡೆಸಿದ ಸೋಂಕು ಪರಿಶೀಲನಾ ಸಭೆಯಲ್ಲಿ ಮೋದಿ ಅವರು, ಮಾದರಿ ಪರೀಕ್ಷೆ, ಸೋಂಕಿತರ ಸಂಪರ್ಕ ಪತ್ತೆ ಮತ್ತು ಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆಗಳಿಲ್ಲ ಎಂದು ಹೇಳಿದ್ದರು.ಹಾಗೆಯೇ,ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ಇಡೀ ದೇಶದ ಸಾಮರ್ಥ್ಯವನ್ನು ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಬಳಸಿಕೊಳ್ಳಲು ಪ್ರಯತ್ನಿಸಬೇಕು ಎಂದೂ ಅಧಿಕಾರಿಗಳಿಗೆ ತಿಳಿಸಿದ್ದರು.
ಏತನ್ಮಧ್ಯೆ ದೇಶದಲ್ಲಿ ಸತತ ಐದನೇ ದಿನವೂ ಸತತ 2 ಲಕ್ಷಕ್ಕಿಂತ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. ಕಳೆದ24 ಗಂಟೆಗಳಲ್ಲಿ2.73 ಲಕ್ಷ ಪ್ರಕರಣಗಳು ವರದಿಯಾಗಿದ್ದು,1,619 ಸೋಂಕಿತರು ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಇನ್ನೂ19,29,329 ಪ್ರಕರಣಗಳು ಸಕ್ರಿಯವಾಗಿವೆ. ಸಾವಿನ ಸಂಖ್ಯೆ 1,78,769ಕ್ಕೆ ಏರಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.