ADVERTISEMENT

ಕೋವಿಡ್ ನಿರ್ವಹಣೆ: ಯೋಗಿ ಆದಿತ್ಯನಾಥ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಡೆಕ್ಕನ್ ಹೆರಾಲ್ಡ್
Published 14 ಜೂನ್ 2021, 3:01 IST
Last Updated 14 ಜೂನ್ 2021, 3:01 IST
ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ (ಪಿಟಿಐ ಚಿತ್ರ)
ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ (ಪಿಟಿಐ ಚಿತ್ರ)   

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಭಾವನಾತ್ಮಕ ಬೆಂಬಲ, ಆರೋಗ್ಯ ಮತ್ತು ಕಾನೂನು ನೆರವು ನೀಡಲು ಯೋಗಿ ಆದಿತ್ಯನಾಥ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಹಿರಿಯ ನಾಗರಿಕರಿಗಾಗಿ ಉತ್ತರ ಪ್ರದೇಶ ಸರ್ಕಾರ ಹಮ್ಮಿಕೊಂಡ ಯೋಜನೆಗೆ ಸಂಬಂಧಿಸಿದ ವರದಿಯೊಂದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಮೋದಿ, ‘ಯೋಗಿ ಆದಿತ್ಯನಾಥ ಅವರಿಂದ ಅತ್ಯುತ್ತಮ ಕ್ರಮ’ ಎಂದು ಬಣ್ಣಿಸಿದ್ದಾರೆ.

ಆದಿತ್ಯನಾಥ ಅವರ ಅವರ ಕಾರ್ಯವೈಖರಿಯ ಬಗ್ಗೆ ಬಿಜೆಪಿಯ ಕೆಲವು ನಾಯಕರೇ ಆಕ್ಷೇಪ ಅಪಸ್ವರಗಳನ್ನೆತ್ತಿದ್ದಾರೆ. ಆದಿತ್ಯನಾಥ ಅವರು ಕೋವಿಡ್ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂದು ದೂರಿದ್ದಾರೆ ಎಂದು ಈಚೆಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎಂದೂ ವರದಿಯಾಗಿತ್ತು. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಕಳೆದ ವಾರ ದೆಹಲಿಗೆ ತೆರಳಿದ್ದ ಆದಿತ್ಯನಾಥ ಅವರು ಮೋದಿ, ಗೃಹಸಚಿವ ಅಮಿತ್‌ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದರು.

ಎರಡು ವಾರಗಳ ಹಿಂದೆ ಲಖನೌನಲ್ಲಿ ನಡೆದಿದ್ದ ಪಕ್ಷದ ಸಭೆಯಲ್ಲಿ, ಅನೇಕ ಶಾಸಕರು ಹಾಗೂ ಮುಖಂಡರು ಕೋವಿಡ್‌ ಎರಡನೇ ಅಲೆಯನ್ನು ಸರ್ಕಾರವು ನಿರ್ವಹಿಸಿದ ರೀತಿಗೆ ಅಸಮಾಧಾನ ವ್ಯಕ್ತಪಡಿಸಿದ್ದರಲ್ಲದೆ ಮುಖ್ಯಮಂತ್ರಿಯ ಬದಲಾವಣೆಗೂ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.