ನವದೆಹಲಿ/ಡೆಹ್ರಾಡೂನ್: ಉತ್ತರಾಖಂಡ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾಗಿರುವ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ಪುಷ್ಕರ್ ಸಿಂಗ್ ಅವರು, ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಮತ್ತು ಸದ್ಯದ ಪರಿಸ್ಥಿತಿ ಕುರಿತು ಪ್ರಧಾನಿಯವರಿಗೆ ವಿವರಿಸಿದರು. ಪರಿಸ್ಥಿತಿ ನಿಭಾಯಿಸಲು ನಮ್ಮ ಸರ್ಕಾರ ಸದಾ ಸಿದ್ಧವಾಗಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ, ‘ಪರಿಸ್ಥಿತಿ ನಿಭಾಯಿಸಲು ಕೇಂದ್ರದಿಂದ ಅಗತ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ‘ ತಿಳಿಸಿದರು.
ಮಳೆ, ಪ್ರವಾಹದ ಸಂಕಷ್ಟಕ್ಕೆ ಸಿಲುಕಿರುವ ಉತ್ತರಾಖಂಡ ರಾಜ್ಯಕ್ಕೆ ನೆರವು ನೀಡುವ ಕುರಿತು ಇದೇ ರಾಜ್ಯದವರಾದ ಕೇಂದ್ರ ಸಚಿವ ಅಜಯ್ ಭಟ್ ಅವರೊಂದಿಗೆ ಪ್ರಧಾನಿ ಚರ್ಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಉತ್ತರಾಖಂಡ ರಾಜ್ಯದಲ್ಲಿ ಸೋಮವಾರ ಸುರಿದ ಭಾರಿ ಮಳೆ ಹಾಗೂ ಸಂಬಂಧಿತ ಘಟನೆಗಳಿಂದ ಮೂವರು ನೇಪಾಳ ಕಾರ್ಮಿಕರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮಳೆ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹವಾಮಾನ ಸುಧಾರಿಸುವವರೆಗೂ ಹಿಮಾಲಯ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ತೆರಳದಂತೆ ಚಾರ್ಧಾಮ್ ಯಾತ್ರಿಕರಿಗೆ ಸಲಹೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.