ನವದೆಹಲಿ: ಕೋವಿಡ್–19 ಸಾಂಕ್ರಾಮಿಕದಿಂದ ದೇಶದ ಆರ್ಥಿಕತೆಯ ಮೇಲಿನ ಪರಿಣಾಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಗುರುವಾರ ಚರ್ಚಿಸಲಿದ್ದಾರೆ. ಹಣಕಾಸು ಸಚಿವಾಲಯ ಮತ್ತು ವಾಣಿಜ್ಯ ಸಚಿವಾಲಯಗಳ ಉನ್ನತ ಮಟ್ಟದ ಸುಮಾರು 50 ಅಧಿಕಾರಿಗಳಿಂದ ಸಲಹೆ ಪಡೆಯಲಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಕೊರೊನಾ ವೈರಸ್ ಲಾಕ್ಡೌನ್ ಸೇರಿದಂತೆ ಹಲವು ಕಾರಣಗಳಿಂದಾಗಿ ಗ್ರಾಹಕರಿಂದ ವಸ್ತುಗಳ ಖರೀದಿ, ಬೇಡಿಕೆ ಕುಸಿದಿರುವುದರಿಂದ ಆರ್ಥಿಕತೆ ಮಂದಗತಿಯಲ್ಲಿದೆ. ಆರ್ಥಿಕತೆಗೆ ಚೇತರಿಕೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಗಮನ ಹರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿರುವುದಾಗಿ ವರದಿಯಾಗಿದೆ.
ಒಂದೂವರೆ ಗಂಟೆಗಳ ವಿಡಿಯೊ ಕಾನ್ಫರೆನ್ಸ್ನಲ್ಲಿ ದೇಶದ ಆರ್ಥಿಕ ಸ್ಥಿತಿಯ ಕುರಿತು ಹಣಕಾಸು ಮತ್ತು ವಾಣಿಜ್ಯ ಸಚಿವಾಲಯಗಳ ಅಧಿಕಾರಿಗಳು ಪ್ರಸ್ತುತ ಪಡಿಸಲಿದ್ದಾರೆ.
ಈಗಾಗಲೇ ಪ್ರಧಾನಿ ಮೋದಿ ಆರ್ಥಿಕ ಸಲಹಾ ಮಂಡಳಿ, ನೀತಿ ಆಯೋಗ ಮತ್ತು ಹಣಕಾಸು ಸಚಿವಾಲಯಗಳ ಮುಖ್ಯ ಆರ್ಥಿಕ ಸಲಹೆಗಾರರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಕೊರೊನಾ ವೈರಸ್ ಪರಿಣಾಮಗಳನ್ನು ಎದುರಿಸುವ ನಿಟ್ಟಿನಲ್ಲಿ ಮೇನಲ್ಲಿ ಸರ್ಕಾರ ₹20.97 ಲಕ್ಷ ಕೋಟಿ ಆರ್ಥಿಕ ಪುನಶ್ಚೇತನ ಮತ್ತು ಪರಿಹಾರ ಪ್ಯಾಕೇಜ್ ಘೋಷಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.