ADVERTISEMENT

ಜಾರ್ಖಂಡ್‌: ₹35,700 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಮಾರ್ಚ್ 2024, 7:30 IST
Last Updated 1 ಮಾರ್ಚ್ 2024, 7:30 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನಲ್ಲಿ&nbsp;ಹಲವು ಯೋಜನೆಗಳನ್ನು ಉದ್ಘಾಟಿಸಿದರು.</p></div>

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನಲ್ಲಿ ಹಲವು ಯೋಜನೆಗಳನ್ನು ಉದ್ಘಾಟಿಸಿದರು.

   

-ಪಿಟಿಐ ಚಿತ್ರ

ಧನ್‌ಬಾದ್ (ಜಾರ್ಖಂಡ್): ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಜಾರ್ಖಂಡ್‌ನಲ್ಲಿ ರಸಗೊಬ್ಬರ, ರೈಲು, ವಿದ್ಯುತ್ ಮತ್ತು ಕಲ್ಲಿದ್ದಲು ಕ್ಷೇತ್ರಕ್ಕೆ ಸಂಬಂಧಿಸಿ ₹35,700 ಕೋಟಿಗೂ ಹೆಚ್ಚು ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ADVERTISEMENT

ಹಿಂದೂಸ್ತಾನ್ ಉರ್ವರಕ್ ಮತ್ತು ರಸಾಯನ್‌ ಲಿಮಿಟೆಡ್ (ಎಚ್‌ಯುಆರ್‌ಎಲ್‌) ಸಿಂದ್ರಿ ರಸಗೊಬ್ಬರ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ‘₹8,900 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿರುವ ಈ ಸ್ಥಾವರವು ರಸಗೊಬ್ಬರ ವಲಯದಲ್ಲಿ ಸ್ವಾವಲಂಬನೆಯತ್ತ ಹೆಜ್ಜೆ ಹಾಕಿದೆ’ ಎಂದಿದ್ದಾರೆ.

‘ಇಂದು ಧನ್‌ಬಾದ್ ಜಿಲ್ಲೆಯಲ್ಲಿ ಸಿಂದ್ರಿಯಲ್ಲಿ ‌ಎಚ್‌ಯುಆರ್‌ಎಲ್‌ ರಸಗೊಬ್ಬರ ಸ್ಥಾವರವನ್ನು ಉದ್ಘಾಟಿಸಲಾಗಿದೆ. ಈ ಸ್ಥಾವರಕ್ಕೆ 2018ರಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದೆ. ಅದರಂತೆ ಇದೀಗ ಸ್ಥಾವರವನ್ನು ಲೋಕಾರ್ಪಣೆ ಮಾಡಲಾಗಿದೆ. ಇದು ಸಾವಿರಾರು ಉದ್ಯೋಗಾವಕಾಶಗಳನ್ನು ಒದಗಿಸಲಿದ್ದು, ಆತ್ಮನಿರ್ಭರ ಭಾರತದ (ಸ್ವಾವಲಂಬಿ ಭಾರತ) ಪ್ರಮುಖ ಹೆಜ್ಜೆಯಾಗಿದೆ’ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಪ್ರತಿ ವರ್ಷ ಸುಮಾರು 360 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದೆ. 2014ರಲ್ಲಿ 225 ಲಕ್ಷ ಮೆಟ್ರಿಕ್ ಟನ್ ಯೂರಿಯಾವನ್ನು ಉತ್ಪಾದಿಸಲಾಗಿತ್ತು. ಯೂರಿಯಾ ಕೊರತೆ ನೀಗಿಸಲು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳಬೇಕಾಗಿತ್ತು. ಕಳೆದ 10 ವರ್ಷಗಳಲ್ಲಿ 310 ಲಕ್ಷ ಮೆಟ್ರಿಕ್ ಟನ್ ಯೂರಿಯಾವನ್ನು ಉತ್ಪಾದನೆ ಮಾಡಲಾಗಿದೆ’ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ₹17,600 ಕೋಟಿಗೂ ಹೆಚ್ಚು ಮೌಲ್ಯದ ಹಲವು ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದರಲ್ಲಿ ದಿಯೋಘರ್ - ದಿಬ್ರುಗಢ್ ರೈಲು, ಟಾಟಾನಗರ ಮತ್ತು ಬಾದಂಪಹಾರ್ ನಡುವಿನ ಮೆಮೊ ರೈಲು ಹಾಗೂ ಶಿವಪುರ ನಿಲ್ದಾಣದಿಂದ ದೀರ್ಘಾವಧಿಯ ಸರಕು ಸಾಗಣೆ ರೈಲು ಸೇವೆಗಳು ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, ಜಾರ್ಖಂಡ್ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್, ಮುಖ್ಯಮಂತ್ರಿ ಚಂಪೈ ಸೊರೇನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.