ಪಣಜಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್)ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರ ಆರೋಗ್ಯವನ್ನು ವಿಚಾರಿಸಿದರು.
ಸಚಿವ ನಾಯಕ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿಯವರು, ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ತಿಳಿಸಿದ್ದಾರೆ ಎಂದು ನಾಯಕ್ ಅವರ ವಿಶೇಷ ಅಧಿಕಾರಿ ಸೂರಜ್ ನಾಯಕ್ ಸುದ್ದಿ ಸಂಸ್ಥೆಗೆ ತಿಳಿಸಿದ್ಧಾರೆ.
ಮೋದಿಯವರು ಕರೆ ಮಾಡುವ ಸ್ವಲ್ಪ ಹೊತ್ತಿಗೆ ಮುಂಚೆ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಆಸ್ಪತ್ರೆಗೆ ಭೇಟಿ ನೀಡಿ ನಾಯಕ್ ಅವರ ಆರೋಗ್ಯ ವಿಚಾರಿಸಿದ್ದರು.
ಇತ್ತೀಚೆಗೆ ಕಾರವಾರ ಸಮೀಪದ ಅಂಕೋಲ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಚಿವರಿಗೆ ಸೋಮವಾರ ಇಲ್ಲಿನ ಜಿಎಂಸಿಎಚ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿರುವುದಾಗಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದರು. ಇತ್ತೀಚೆಗಷ್ಟೇ ನವದೆಹಲಿಯ ಏಮ್ಸ್ ವೈದ್ಯರ ತಂಡ, ಗೋವಾ ಆಸ್ಪತ್ರೆಗೆ ಭೇಟಿ ನೀಡಿ, ನಾಯಕ್ ಅವರ ಆರೋಗ್ಯವನ್ನು ಪರಿಶೀಲಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.