ನವದೆಹಲಿ: ‘ಪಿಎಂ ಸ್ವನಿಧಿ’ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಂದ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಅರ್ಜಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ.
‘ಕೋವಿಡ್–19 ಲಾಕ್ಡೌನ್ ನಡುವೆ ಬೀದಿಬದಿ ವ್ಯಾಪಾರಿಗಳು ತಮ್ಮ ವ್ಯಾಪಾರವನ್ನು ಪುನರಾರಂಭಿಸಲು ಕೇಂದ್ರ ಸರ್ಕಾರವು ‘ಪಿಎಂ ಸ್ವನಿಧಿ’ ಯೋಜನೆಯಡಿ ₹ 10 ಸಾವಿರದ ತನಕ ಸಾಲ ನೀಡುವ ಉದ್ದೇಶವನ್ನು ಹೊಂದಿದೆ’ ಎಂದು ಬುಧವಾರ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
‘ಕೇಂದ್ರದ ಆತ್ಮನಿರ್ಭರ ಭಾರತದ ಪಿಎಂ ಸ್ವನಿಧಿ ಯೋಜನೆಯು ಬೀದಿಬದಿ ವ್ಯಾಪಾರಿಗಳಲ್ಲಿ ಸಾಕಷ್ಟು ಉತ್ಸಾಹ ಮೂಡಿಸಿದೆ’ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ತಿಳಿಸಿದೆ.
ಈ ಯೋಜನೆಯಡಿ ಸಾಲ ಪ್ರಕ್ರಿಯೆ ಪ್ರಾರಂಭವಾದ 41 ದಿನಗಳಲ್ಲಿ ಒಂದು ಲಕ್ಷ ಜನರಿಗೆ ಸಾಲ ಮಂಜೂರಾಗಿದ್ದು, ಇನ್ನೂ ಐದು ಲಕ್ಷ ಬೀದಿಬದಿ ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆಯಡಿ ₹ 10 ಸಾವಿರ ಸಾಲ ಪಡೆಯುವ ವ್ಯಾಪಾರಿಗಳು ಒಂದು ವರ್ಷದ ಕಾಲಾವಾಧಿಯಲ್ಲಿ ಮಾಸಿಕ ಕಂತುಗಳಲ್ಲಿ ಸಾಲವನ್ನು ಮರುಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವಾಲಯವು ಮಾಹಿತಿ ನೀಡಿದೆ.
ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಆ್ಯಪ್ ಕೂಡ ಬಿಡುಗಡೆ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆಯ ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಮಾತ್ರವಲ್ಲದೇ, ಸಚಿವಾಲಯವು ರೂಪಿಸಿರುವ ‘ಶಿಫಾರಸು ಪತ್ರ ಮಾಡ್ಯೂಲ್’ ಮೂಲಕ ಗುರುತಿನ ಚೀಟಿ ಅಥವಾ ಮಾರಾಟ ಪ್ರಮಾಣ ಪತ್ರ ಹೊಂದಿರದ ಬೀದಿಬದಿ ವ್ಯಾಪಾರಿಗಳು ಸಹ ಯೋಜನೆಯಡಿ ಪ್ರಯೋಜನಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.