ADVERTISEMENT

ರಾಹುಲ್‌, ಪ್ರಿಯಾಂಕಾ ಭೇಟಿಯಾದ ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್‌ ಕಿಶೋರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜುಲೈ 2021, 11:48 IST
Last Updated 13 ಜುಲೈ 2021, 11:48 IST
 ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್‌ ಕಿಶೋರ್‌
ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್‌ ಕಿಶೋರ್‌    

ನವದೆಹಲಿ: ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್‌ ಕಿಶೋರ್‌ ಮಂಗಳವಾರ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ.ವೇಣುಗೋಪಾಲ್‌ ಅವರೊಂದಿಗೂ ಚರ್ಚೆ ನಡೆಸಿದ್ದಾರೆ.

ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿಯ (ಎನ್‌ಸಿಪಿ) ಮುಖಂಡ ಶರದ್‌ ಪವಾರ್‌ ಅವರನ್ನು ಜೂನ್‌ 21ರಂದು ಎರಡನೇ ಬಾರಿಗೆ ಪ್ರಶಾಂತ್‌ ಕಿಶೋರ್‌ ಭೇಟಿ ಮಾಡಿದ್ದರು. ಈಗ ಕಿಶೋರ್‌ ಕಾಂಗ್ರೆಸ್‌ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.

2024ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಕೇಂದ್ರದಲ್ಲಿ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಎದುರು ವಿರೋಧ ಪಕ್ಷಗಳ ರಾಷ್ಟ್ರೀಯ ಮೋರ್ಚಾ ರಚನೆಯಾಗುವ ಬಗ್ಗೆ ಗಾಳಿ ಸುದ್ದಿ ಹಬ್ಬಿದೆ. ಎನ್‌ಸಿಪಿ ಮುಖಂಡ ಪವಾರ್‌ ಅವರ ನಿವಾಸದಲ್ಲಿ ಕಿಶೋರ್‌ ಒಂದೂವರೆ ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆಸಿದ್ದರು. ಅದಕ್ಕೂ ಮುನ್ನ ಜೂನ್‌ 11ರಂದು ಪವಾರ್‌ ಮತ್ತು ಕಿಶೋರ್‌ ಮುಂಬೈನಲ್ಲಿ ಸುಮಾರು ಮೂರು ಗಂಟೆಗಳು ಚರ್ಚೆ ನಡೆಸಿದ್ದರು ಎಂದು ಹಿಂದುಸ್ತಾನ್ ಟೈಮ್ಸ್‌ ವರದಿ ಮಾಡಿದೆ.

ADVERTISEMENT

ಪಂಜಾಬ್‌ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಮತ್ತು ಮುಖಂಡ ನವಜೋತ್‌ ಸಿಂಗ್‌ ಸಿಧು ನಡುವಿನ ತಿಕ್ಕಾಟ ಶಮನಕ್ಕಾಗಿ ಕಾಂಗ್ರೆಸ್‌ ಹೈಕಮಾಂಡ್‌ ಪ್ರಯತ್ನಿಸುತ್ತಿದೆ. ಪಂಜಾಬ್‌ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಅಲ್ಲಿ ಕಾಂಗ್ರೆಸ್‌ ಮತ್ತೆ ಚುಕ್ಕಾಣಿ ಹಿಡಿಯಲು ಮತ್ತು ಪಕ್ಷದಲ್ಲಿನ ಪರಿಸ್ಥಿತಿ ಶಾಂತಗೊಳಿಸುವ ನಿಟ್ಟಿನಲ್ಲಿ ಕಿಶೋರ್‌ ಜೊತೆಗೆ ಚರ್ಚೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.