ನವದೆಹಲಿ: ‘ಉತ್ತರ ಪ್ರದೇಶದಲ್ಲಿ ಕಳೆದ ವಾರವೊಂದರಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ 13 ಭೀಕರ ಅಪರಾಧ ಪ್ರಕರಣಗಳು ನಡೆದಿದ್ದು, ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ವಿಫಲವಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಆರೋಪಿಸಿದ್ದಾರೆ.
‘ಅ. 9ರಿಂದ 15ರವರೆಗೆ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ನಡೆದ ವಿವಿಧ ಅಪರಾಧಗಳನ್ನು ಉಲ್ಲೇಖಿಸಿದ ಅವರು, ಬಿಜೆಪಿಯು ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ. ಇದರಿಂದ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ’ ಎಂದು ದೂರಿದ್ದಾರೆ.
‘ಕಳೆದ ವಾರವೊಂದರಲ್ಲಿಯೇ ರಾಜ್ಯದಲ್ಲಿ ಮಹಿಳೆಯರ ಮೇಲೆ 13 ಭೀಕರ ಅಪರಾಧ ಪ್ರಕರಣಗಳು ಜರುಗಿವೆ. ಈ ಪ್ರಕರಣಗಳಲ್ಲಿ ನಾಲ್ವರು ಸಂತ್ರಸ್ತೆಯರು ಹತ್ಯೆಗೀಡಾಗಿದ್ದಾರೆ ಇಲ್ಲವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯೊಂದು ಹೇಳುತ್ತದೆ’ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
‘ಮಹಿಳಾ ಸುರಕ್ಷತೆಯ ಸ್ಥಿತಿಯು ಶೋಚನೀಯವಾಗಿದೆ. ಮುಖ್ಯಮಂತ್ರಿ ಅವರಿಗೆ ‘ವಿಶೇಷ ಅಧಿವೇಶನ’ ನಡೆಸಲು ಸಮಯವಿಲ್ಲ. ಆದರೆ, ಅವರು ಫೋಟೊ ಸೆಷೆನ್ಗಳಲ್ಲಿ ಬ್ಯುಸಿಯಾಗಿದ್ದಾರೆ’ ಎಂದೂ ಅವರು ಟ್ವೀಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.