ADVERTISEMENT

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆರೋಗ್ಯದಲ್ಲಿ ಚೇತರಿಕೆ: ವಿಶೇಷ ಕೋಣೆಗೆ ಶಿಫ್ಟ್

ಏಜೆನ್ಸೀಸ್
Published 3 ಏಪ್ರಿಲ್ 2021, 8:29 IST
Last Updated 3 ಏಪ್ರಿಲ್ 2021, 8:29 IST
ರಾಷ್ಟ್ರಪತಿ ರಾಮನಾಥ್ ಕೋವಿಂದ್
ರಾಷ್ಟ್ರಪತಿ ರಾಮನಾಥ್ ಕೋವಿಂದ್    

ನವದೆಹಲಿ: ಈ ವಾರದ ಆರಂಭದಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಯ ತೀವ್ರ ನಿಗಾ ಘಟಕದಿಂದ (ಐಸಿಯು) ವಿಶೇಷ ಕೋಣೆಗೆ ಸ್ಥಳಾಂತರಿಸಲಾಗಿದೆ.

ಈ ಕುರಿತು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದ್ದು, ರಾಷ್ಟ್ರಪತಿ ಕೋವಿಂದ್ ಅವರನ್ನು ಐಸಿಯುನಿಂದ ಇಂದು ಏಮ್ಸ್‌ನ ವಿಶೇಷ ಕೋಣೆಗೆ ಸ್ಥಳಾಂತರಿಸಲಾಯಿತು. ಅವರ ಆರೋಗ್ಯವು ದಿನದಿಂದ ದಿನಕ್ಕೆ ಸುಧಾರಿಸುತ್ತಿದ್ದು, ವೈದ್ಯರು ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ' ಎಂದು ಹೇಳಿದೆ.

ರಾಷ್ಟ್ರಪತಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಕಳೆದ ಮಾ. 26ರ ಶುಕ್ರವಾರ ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಏಮ್ಸ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಬಳಿಕ ಮಾ. 30ರಂದು ರಾಷ್ಟ್ರಪತಿಗಳು ಏಮ್ಸ್ ಆಸ್ಪತ್ರೆಯಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ADVERTISEMENT

ಬಳಿಕ ಗುರುವಾರ (ಮಾ.01), ಬೈಪಾಸ್ ಶಸ್ತ್ರಚಿಕಿತ್ಸೆಯ ನಂತರ ನಾನು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದೇನೆ, ವೈದ್ಯರು ಮತ್ತು ಆರೈಕೆದಾರರ ಅದ್ಭುತ ಆರೈಕೆಗೆ ಧನ್ಯವಾದಗಳು. ಶೀಘ್ರವಾಗಿ ಗುಣಮುಖವಾಗಲೆಂದು ಶುಭ ಹಾರೈಸಿದ ಭಾರತ ಮತ್ತು ವಿದೇಶಗಳ ನಾಗರಿಕರು ಮತ್ತು ನಾಯಕರ ಸಂದೇಶಗಳಿಗೆ ನಾನು ಋಣಿಯಾಗಿದ್ದೇನೆ. ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಯನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಕಷ್ಟ!' ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿತ್ತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.