ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ದೊಡ್ಡ ವಿಪತ್ತು ಸೃಷ್ಟಿಸಿರುವ ಅಂಪನ್ ಚಂಡಮಾರುತದ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.
ಕೋಲ್ಕತ್ತಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗದೀಪ್ ಸ್ವಾಗತಿಸಿದರು. ಈ ವೇಳೆ ಮೂವರು ಮಾಸ್ಕ್ ಧರಿಸಿದ್ದರು. ಇಲ್ಲಿಂದ ವಾಯುಪಡೆ ಹೆಲಿಕಾಪ್ಟರ್ ಮೂಲಕ ತೆರಳಿದ ಪ್ರಧಾನಿ ಮೋದಿ ಮತ್ತು ಮಮತಾ ಬ್ಯಾನರ್ಜಿ ದಕ್ಷಿಣ ಬಂಗಾಳ ಪ್ರದೇಶಗಳ ವೈಮಾನಿಕಸಮೀಕ್ಷೆ ನಡೆಸಿದರು.
ಪಶ್ಚಿಮ ಬಂಗಾಳದಲ್ಲಿ ಉತ್ತರ ಹಾಗೂ ದಕ್ಷಿಣ 24 ಪರಗಣ ಜಿಲ್ಲೆಗಳು ಸಂಪೂರ್ಣ ನಾಶವಾಗಿದ್ದು ರಾಜಧಾನಿ ಕೋಲ್ಕತ್ತದಲ್ಲಿ ಭಾರಿ ಹಾನಿ ಸಂಭವಿಸಿರುವ ಬಗ್ಗೆ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ.
ಅಂಪನ್ ಚಂಡಮಾರುತಕ್ಕೆ ಇಲ್ಲಿಯವರೆಗೂ 80 ಜನರು ಬಲಿಯಾಗಿದ್ದಾರೆ.
ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನೂರಾರು ಕಾರುಗಳು ಗಾಳಿ ಹೊಡೆತಕ್ಕೆ ಸಿಲುಕಿ ನಜ್ಜುಗುಜ್ಜಾಗಿವೆ. 125 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಿದ್ದರಿಂದ ಮರಗಳು ಬುಡಮೇಲಾಗಿವೆ. ವಿದ್ಯುತ್ ಕಂಬಗಳು ಉರುಳಿದ್ದು, ಉತ್ತರ ಹಾಗೂ ದಕ್ಷಿಣ 24 ಪರಗಣ ಜಿಲ್ಲೆಗಳು ಮತ್ತು ಕೋಲ್ಕತ್ತದ ಬಹುತೇಕ ಭಾಗಗಳಲ್ಲಿ ಬುಧವಾರ ಸಂಜೆಯಿಂದ ವಿದ್ಯುತ್ ಸಂಪರ್ಕ ಇಲ್ಲ ಎಂದು ವರದಿಯಾಗಿದೆ.
ಸಹಜ ಸ್ಥಿತಿಯತ್ತ ಒಡಿಶಾ: ಒಡಿಶಾದಲ್ಲಿ 44.8 ಲಕ್ಷ ಜನರು ಚಂಡಮಾರುತದಿಂದ ಬಾಧಿತರಾಗಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಒಡಿಶಾದಲ್ಲಿ ಚಂಡಮಾರುತದ ಪ್ರಭಾವಕ್ಕೆ ಒಳಗಾಗಿರುವ ಪ್ರದೇಶಗಳಲ್ಲಿ ಮುಂದಿನ 24ರಿಂದ 48 ಗಂಟೆಗಳ ಅವಧಿಯಲ್ಲಿ ಜನಜೀವನ ಸಹಜ ಸ್ಥಿತಿಗೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.