ADVERTISEMENT

ರಾಷ್ಟ್ರೀಯ ಭದ್ರತೆಗೆ ಆದ್ಯತೆ ಕೊಡಿ: ರಾಜ್ಯಗಳಿಗೆ ಅಮಿತ್ ಶಾ

ಐಎಎನ್ಎಸ್
Published 19 ಆಗಸ್ಟ್ 2022, 1:56 IST
Last Updated 19 ಆಗಸ್ಟ್ 2022, 1:56 IST
ಅಮಿತ್ ಶಾ
ಅಮಿತ್ ಶಾ   

ನವದೆಹಲಿ: ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳಿಗೆಆದ್ಯತೆ ಕೊಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ನವದೆಹಲಿಯಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ (ಎನ್‌ಎಸ್‌ಎಸ್) ಸಮಾವೇಶದ ಸಮಾರೋಪವನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ವಿಶೇಷವಾಗಿ ಗಡಿ ಜಿಲ್ಲೆಗಳಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.

ರಾಜ್ಯಗಳ ಡಿಜಿಪಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಂತ್ರಿಕ ಹಾಗೂ ಕಾರ್ಯತಂತ್ರಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಗಡಿ ಜಿಲ್ಲೆಗಳಲ್ಲಿ ತಳಮಟ್ಟದಲ್ಲಿ ಹಂಚಿಕೊಳ್ಳಬೇಕು ಎಂದು ಹೇಳಿದರು.

ಆಂತರಿಕ ಭದ್ರತೆ ಬಗ್ಗೆ ವಿವರಣೆ ನೀಡಿದ ಅವರು, ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ, ಈಶಾನ್ಯ ರಾಜ್ಯಗಳಲ್ಲಿ ಉಗ್ರಗಾಮಿ ಸಂಘಟನೆಗಳ ಬೆದರಿಕೆಯನ್ನು ತಟಸ್ಥಗೊಳಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಕಾನೂನುಗಳನ್ನು ರೂಪಿಸಿ ರಾಜ್ಯಗಳೊಂದಿಗೆ ನಿಕಟ ಸಮನ್ವಯದಿಂದ ಕೆಲಸ ಮಾಡಿದ್ದು, ತಂತ್ರಜ್ಞಾನದ ಗರಿಷ್ಠ ಬಳಕೆ ಮಾಡಿದ್ದೇವೆ ಎಂದು ಹೇಳಿದರು.

2014ರಲ್ಲಿ ಮೋದಿ, ಪ್ರಧಾನಿ ಹುದ್ದೆಗೇರಿದ ಬಳಿಕ ರಾಷ್ಟ್ರೀಯ ಭದ್ರತಾ ಕಾರ್ಯವಿಧಾನವನ್ನು ಬಲಪಡಿಸಲಾಗಿದೆ. ದೇಶದ ಯುವ ಜನತೆಯ ಭವಿಷ್ಯಕ್ಕಾಗಿ ನಡೆಯುವ ಈ ಹೋರಾಟವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು ಎಂದು ಅವರು ಒತ್ತಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.