ಅಮೇಠಿ: ಇಲ್ಲಿನ ಸಂಗ್ರಾಮಪುರದಲ್ಲಿ ಕಳ್ಳತನದ ಆರೋಪದಲ್ಲಿ ಹಲ್ಲೆಗೆ ಗುರಿಯಾಗಿದ್ದ ದಲಿತ ಬಾಲಕಿ ಮತ್ತು ಆಕೆಯ ಕುಟುಂಬದವರನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಭೇಟಿಯಾಗಿದ್ದಾರೆ. ‘ಸಂತ್ರಸ್ತ ಬಾಲಕಿಗೆ ನ್ಯಾಯ ದೊರಕಿಸಲು ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ಕಾಂಗ್ರೆಸ್ ನೀಡಲಿದೆ’ ಎಂದು ಅವರು ಹೇಳಿದ್ದಾರೆ.
ಸಂತ್ರಸ್ತ ಬಾಲಕಿಯನ್ನು ಮೂರು ಮಂದಿ ಪುರುಷರು ನೆಲಕ್ಕೆ ಅವುಚಿ ಹಿಡಿದು, ಆಕೆಯ ಪಾದಗಳಿಗೆ ದೊಣ್ಣೆಯಿಂದ ಹೊಡೆಯುತ್ತಿರುವ ವಿಡಿಯೊ ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ಮನೆಯ ಮಹಿಳೆಯರು ಸಹ ಕಳ್ಳತನದ ಬಗ್ಗೆ ಬಾಲಕಿಯನ್ನು ಬೈದು ಪ್ರಶ್ನಿಸುತ್ತಿರುವ ದೃಶ್ಯ ಆ ವಿಡಿಯೊದಲ್ಲಿ ಇತ್ತು.
ಘಟನೆ ನಡೆದು ಎರಡು ದಿನಗಳಾದರೂ ಕ್ರಮ ತೆಗೆದುಕೊಂಡಿಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ವೈಯಕ್ತಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.
‘ತಪ್ಪಿತಸ್ಥರ ವಿರುದ್ಧ ಸರ್ಕಾರವು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು’ ಎಂದು ಪ್ರಿಯಾಂಕಾ ಅವರು ಟ್ವೀಟ್ ಮಾಡಿದ್ದರು. ಅದರ ಬೆನ್ನಲ್ಲೇ ಸಂತ್ರಸ್ತ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಗುರುವಾರ ಬೆಳಿಗ್ಗೆ ವೇಳೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಮೂವರನ್ನೂ ನ್ಯಾಯಾಲಯದ ಎದುರು ಹಾಜರು ಮಾಡಲಾಗಿದೆ.
ಆರೋಪಿಗಳನ್ನು ಜೈಲಿಗೆ ಹಾಕಲಾಗಿದೆ. ಆನಂತರ ಪ್ರಿಯಾಂಕಾ ನೇತೃತ್ವದ ನಿಯೋಗವು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.