ನವದೆಹಲಿ: ಉತ್ತರ ಪ್ರದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆಎಂದು ಎಐಸಿಸಿಯ ಪ್ರಧಾನ ಕಾರ್ದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ಭದ್ರತೆಗೆ ಉತ್ತರ ಪ್ರದೇಶ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಕೂಡಲೇ ಹೊರಬೇಕು ಎಂದೂ ಪ್ರಿಯಾಂಕಾ ಆಗ್ರಹಿಸಿದ್ದಾರೆ.
‘ನರಭಕ್ಷಕರು ಅಮಾಯಕರನ್ನು ಕಿತ್ತು ತಿನ್ನುವ ಪರಿಸ್ಥಿತಿ ಉತ್ತರ ಪ್ರದೇಶದಲ್ಲಿ ಸೃಷ್ಟಿಯಾಗಿದೆ. ಮಹಿಳೆಯರು ಭಯದ ವಾತಾವರಣಕ್ಕೆ ದೂಡಲ್ಪಟ್ಟಿದ್ದಾರೆ. ಮಾನವರನ್ನು ಜೀವಂತವಾಗಿ ಸುಡಲಾಗುತ್ತಿದೆ. ಆದರೆ, ಸರ್ಕಾರ ಅತ್ತ ನೋಡುತ್ತಲೇ ಇಲ್ಲ. ಮಹಿಳೆಯರು ಮತ್ತು ಮಕ್ಕಳ ಭದ್ರತೆಯ ಜವಾಬ್ದಾರಿಯನ್ನು ಸರ್ಕಾರ ಯಾವಾಗ ಹೊರಲಿದೆ?’ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರಗಳ ಕುರಿತು ಪ್ರಕಟವಾದ ವರದಿಗಳ ಶೀರ್ಷಿಗಳ ಟ್ವಿಟರ್ನಲ್ಲಿ ಪ್ರಕಟಿಸುವ ಮೂಲಕ ಪ್ರಿಯಾಂಕಾ ಮೇಲಿನಂತೆ ಮಾತನಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ಅತ್ಯಾಚಾರದಂಥ ಪ್ರಕರಣಗಳು ನಿತ್ಯ ವರದಿಯಾಗುತ್ತಿವೆ. ಇತ್ತೀಚೆಗಷ್ಟೇ ನಾಲ್ವರು ದುಷ್ಕರ್ಮಿಗಳು ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಎದುರೇ ಅತ್ಯಾಚಾರ ಮಾಡಿದ್ದರು. ಇಂಥ ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಿಯಾಂಕಾ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.