ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದು ಸಾಂಕ್ರಾಮಿಕ ರೋಗದ ಮಧ್ಯೆ 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ಸಲಹೆ ನೀಡಿದ್ದಾರೆ. ಈ ಸಂದರ್ಭ ಪರೀಕ್ಷೆ ನಡೆಸಿದರೆ, ಅವರ ಜೀವಕ್ಕೆ ಅಪಾಯವನ್ನುಂಟು ಮಾಡುವ ಮೂಲಕ ದೊಡ್ಡ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ಈ ವಿಷಯದ ಬಗ್ಗೆ ಮಾತುಕತೆ ನಡೆಸಿದ ಹಲವಾರು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ತಮಗೆ ದೊರೆತ ಸಲಹೆಗಳನ್ನು ಪ್ರಿಯಾಂಕಾ ಗಾಂಧಿ ಅವರು ಸಚಿವರಿಗೆ ಬರೆದ ಪತ್ರದಲ್ಲಿ ಹಂಚಿಕೊಂಡಿದ್ದಾರೆ.
ಮೇ 23 ರಂದು ನಡೆದ ಉನ್ನತ ಮಟ್ಟದ ಸಭೆಯ ನಂತರ, 12 ನೇ ತರಗತಿ ಮಂಡಳಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ರಾಜ್ಯಗಳಲ್ಲಿ ವ್ಯಾಪಕ ಒಮ್ಮತವಿದೆ ಮತ್ತು ಜೂನ್ 1 ರೊಳಗೆ ಸರಕಾರದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದರು.
‘12 ನೇ ತರಗತಿಯ ಸಿಬಿಎಸ್ಇ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಂದ ನಾನು ಪಡೆದ ಹಲವಾರು ಸಲಹೆಗಳ ಸಾರಾಂಶವನ್ನು ಶಿಕ್ಷಣ ಸಚಿವರಿಗೆ ಬರೆದು ತಿಳಿಸಿದ್ದೇನೆ. ಅವರ ಕೂಗನ್ನು ಸಚಿವರು ಕೇಳಿಸಿಕೊಳ್ಳಬೇಕು’ ಎಂದು ಟ್ವೀಟ್ನಲ್ಲಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಅವರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದು ತಿಳಿಸಿದ ಅವರು,‘ಸಿಬಿಎಸ್ಇ 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕುರಿತು ಮರುಪರಿಶೀಲಿಸುವಂತೆ ಮತ್ತು ಪೋಷಕರು ನೀಡಿದ ಮೇಲಿನ ಸಲಹೆಗಳನ್ನು ಬಹಳ ಗಂಭೀರವಾಗಿ ಪರಿಗಣಿಸುವಂತೆ ನಾನು ಮತ್ತೊಮ್ಮೆ ನಿಮ್ಮನ್ನು ಒತ್ತಾಯಿಸುತ್ತೇನೆ’ ಎಂದು ಬರೆದಿರುವುದಾಗಿ ಅವರು ಹೇಳಿದ್ದಾರೆ.
12 ನೇ ತರಗತಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸದಿರಲು ಹಲವು ಬಾರಿ ಒತ್ತಾಯಿಸಿರುವ ಕಾಂಗ್ರೆಸ್ ಮುಖಂಡೆ, ವಿದ್ಯಾರ್ಥಿಗಳ ಮೌಲ್ಯಮಾಪನಕ್ಕೆ ಓಪನ್ ಬುಕ್ ಪರೀಕ್ಷೆ ಸೇರಿದಂತೆ ಹಲವಾರು ಮಾರ್ಗಗಳನ್ನು ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.