ನವದೆಹಲಿ: ವಲಸೆ ಕಾರ್ಮಿಕರ ನೋಂದಣಿ ಪ್ರಕ್ರಿಯೆ ನಿಧಾನವಾಗಿ ನಡೆಯುತ್ತಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸರ್ಕಾರಕ್ಕೆ ಎಚ್ಚರಿಸಿದೆ.
ವಲಸೆ ಕಾರ್ಮಿಕರನ್ನು ಗುರುತಿಸುವ ಮತ್ತು ನೋಂದಾಯಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಿದರೆ, ಅವರಿಗೆ ಈ ಸಾಂಕ್ರಾಮಿಕ ಸಮಯದಲ್ಲಿ ಅಗತ್ಯ ನೆರವು ಯೋಜನೆಗಳನ್ನು ವಿಸ್ತರಿಸಬಹುದು ಎಂದು ಕೋರ್ಟ್ ಹೇಳಿದೆ.
ಕೋವಿಡ್–19 ಸಾಂಕ್ರಾಮಿಕದ ಈ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರ ಆಹಾರ ಭದ್ರತೆ, ಹಣ ವರ್ಗಾವಣೆ, ಸಾರಿಗೆ ಸೌಕರ್ಯ ಮತ್ತು ಇತರ ಕಲ್ಯಾಣ ಕಾರ್ಯಕ್ರಮಗಳು ಅಗತ್ಯವಾಗಿ ಒದಗಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕಾಗಿ ಕೋರಿ ಮೂವರು ಸಾಮಾಜಿಕ ಕಾರ್ಯಕರ್ತರು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಮನವಿ ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್. ಶಾ ಅವರನ್ನೊಳಗೊಮಡ ಪೀಠ ಈ ನಿರ್ದೇಶನ ನೀಡಿದೆ.
ವಲಸೆ ಕಾರ್ಮಿಕರೂ ಸೇರಿ ಎಲ್ಲಾ ಫಲಾನುಭಿವಿಗಳಿಗೆ ಅಗತ್ಯ ಯೋಜನೆಗಳು ತಲುಪಲೇಬೇಕು. ಹಾಗಾಗಿ ನೋಂದಣಿ ಪ್ರಕ್ರಿಯೆಯ ಮೇಲ್ವಿಚಾರಣೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಹಿಸಬೇಕು ಎಂದಿದೆ. ಅಸಂಘಟಿತ ಕಾರ್ಮಿಕರ ನೋಂದಣಿ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಯ ನ್ಯಾಯಾಲಯಕ್ಕೆ ತೃಪ್ತಿ ತಂದಿಲ್ಲ ಎಂದು ಕೂಡ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.