ADVERTISEMENT

ದ್ವೇಷ ಭಾಷಣ: ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಗೆ ಪತ್ರ

ಪಿಟಿಐ
Published 1 ಜನವರಿ 2022, 5:58 IST
Last Updated 1 ಜನವರಿ 2022, 5:58 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಸಶಸ್ತ್ರ ಪಡೆಗಳ ಐವರು ಮಾಜಿ ಮುಖ್ಯಸ್ಥರು, ಅಧಿಕಾರಿಗಳು ಸೇರಿದಂತೆ ಹಲವಾರು ನಾಗರಿಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಇತ್ತೀಚಿನ ದಿನಗಳಲ್ಲಿ ವರದಿಯಾಗಿರುವ ದ್ವೇಷ ಭಾಷಣಗಳ ಘಟನೆಗಳ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಪತ್ರವೊಂದರಲ್ಲಿ 100ಕ್ಕೂ ಹೆಚ್ಚು ಜನರ ಗುಂಪು, ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಡಿದ ಕೋಮುವಾದಿ ಭಾಷಣ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಘಟನೆಯನ್ನು ಖಂಡಿಸಿದೆ. ಅಂತವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

'ದ್ವೇಷವನ್ನು ಸಾರ್ವಜನಿಕವಾಗಿ ಅಭಿವ್ಯಕ್ತಗೊಳಿಸಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಇಂತಹ ಘಟನೆಗಳನ್ನು ನಾವು ಒಪ್ಪುವುದಿಲ್ಲ. ಇದು ಆಂತರಿಕ ಭದ್ರತೆಯ ಗಂಭೀರ ಉಲ್ಲಂಘನೆ ಮಾತ್ರವಲ್ಲದೆ ನಮ್ಮ ರಾಷ್ಟ್ರದ ಸಾಮಾಜಿಕ ವ್ಯವಸ್ಥೆಯನ್ನು ಹಾಳುಗೆಡವಬಹುದು' ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

'ಗಡಿಯಲ್ಲಿನ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದೇಶದೊಳಗೆ ಯಾವುದೇ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವುದು ಬಾಹ್ಯ ಶಕ್ತಿಗಳನ್ನು ಪ್ರೇರೇಪಿಸುತ್ತದೆ. ನಮ್ಮ ವೈವಿಧ್ಯಮಯ ಮತ್ತು ಬಹುಸಂಖ್ಯಾತ ಸಮಾಜದಲ್ಲಿ ವ್ಯಕ್ತಿಯೊಬ್ಬರ ಅಥವಾ ಇನ್ನೊಂದು ಸಮುದಾಯದ ವಿರುದ್ಧ ಹಿಂಸಾಚಾರಕ್ಕೆ ಪ್ರೇರೇಪಿಸುವ ಇಂತಹ ಹೇಳಿಕೆಗಳನ್ನು ನೀಡುವುದು ಎಲ್ಲರ ಏಕತೆ ಮತ್ತು ಒಗ್ಗಟ್ಟಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ' ಎಂದಿದ್ದಾರೆ.

ನೌಕಾಪಡೆಯ ಮಾಜಿ ಮುಖ್ಯಸ್ಥರಾದ ಅಡ್ಮಿರಲ್ (ನಿವೃತ್ತ) ಎಲ್ ರಾಮದಾಸ್, ಅಡ್ಮಿರಲ್ (ನಿವೃತ್ತ) ವಿಷ್ಣು ಭಾಗವತ್, ಅಡ್ಮಿರಲ್ (ನಿವೃತ್ತ) ಅರುಣ್ ಪ್ರಕಾಶ್ ಮತ್ತು ಅಡ್ಮಿರಲ್ (ನಿವೃತ್ತ) ಆರ್.ಕೆ. ಧೋವನ್ ಸೇರಿದಂತೆ ಹಲವರು ಪತ್ರಕ್ಕೆ ಸಹಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.