ADVERTISEMENT

ಸಂಸತ್ತಿಗೆ ಚಳಿಗಾಲದ ಅಧಿವೇಶನದ ಟ್ರ್ಯಾಕ್ಟರ್ ಜಾಥಾ ಹಿಂಪಡೆದಿಲ್ಲ: ರೈತ ಮುಖಂಡರು

ಪಿಟಿಐ
Published 20 ನವೆಂಬರ್ 2021, 11:14 IST
Last Updated 20 ನವೆಂಬರ್ 2021, 11:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರೂ ಮುಂಬರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸಂಸತ್ ಭವನದತ್ತ ನಿತ್ಯವೂ ಉದ್ದೇಶಿಸಲಾಗಿರುವ ಟ್ರ್ಯಾಕ್ಟರ್ ಜಾಥಾವನ್ನು ಹಿಂಪಡೆದಿಲ್ಲ ಎಂದು ರೈತ ಮುಖಂಡರು ಶನಿವಾರ ತಿಳಿಸಿದ್ದಾರೆ.

ಅಲ್ಲದೆ ಈ ಕುರಿತು ಭಾನುವಾರ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ ಚಳಿಗಾಲದ ಅಧಿವೇಶನದ ಸಂದರ್ಭ ನಿತ್ಯವೂ ಸಂಸತ್ ಭವನದವರೆಗೂ ಟ್ರ್ಯಾಕ್ಟರ್ ಜಾಥಾ ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಘೋಷಿಸಿತ್ತು. ಅಲ್ಲದೆ ಈ ಶಾಂತಿಯುತ ಜಾಥಾದಲ್ಲಿ 500 ರೈತರು ಭಾಗವಹಿಸಲಿದ್ದಾರೆ ಎಂದು ಹೇಳಿದೆ.

ಚಳಿಗಾಲದ ಅಧಿವೇಶನವು ನವೆಂಬರ್ 29ರಂದು ಆರಂಭವಾಗಲಿದೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.

'ಸಂಸತ್ತಿಗೆ ನಮ್ಮ ಟ್ರ್ಯಾಕ್ಟರ್ ಜಾಥಾ ಇನ್ನೂ ಕೈಬಿಟ್ಟಿಲ್ಲ. ಅಂದೋಲನದ ಭವಿಷ್ಯ ಹಾಗೂ ಎಂಎಸ್‌ಪಿ ಸಮಸ್ಯೆಗಳ ಕುರಿತು ಭಾನುವಾರ ಸಿಂಘು ಗಡಿಯಲ್ಲಿ ಸೇರಲಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.

ಜನವರಿ 26, ಗಣರಾಜ್ಯೋತ್ಸವ ದಿನದಂದು ರೈತರು ಕೆಂಪು ಕೋಟೆಗೆ ನಡೆಸಿದ ಟ್ರಾಕ್ಟರ್ ಜಾಥಾದಲ್ಲಿ ಬಾರಿ ಹಿಂಸಾಚಾರ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.