ನವದೆಹಲಿ: ಮುಂಬೈ ಭೇಟಿ ವೇಳೆ ನಡೆದ ಶಿಷ್ಟಾಚಾರ ಉಲ್ಲಂಘನೆ ವಿಚಾರವು ಕ್ಷುಲ್ಲಕವಾಗಿದ್ದು, ಅದನ್ನು ಅತಿಯಾಗಿ ರಂಜಿಸಬೇಡಿ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ.ಆರ್.ಗವಾಯಿ ಹೇಳಿದ್ದಾರೆ.
ಸಿಜೆಐ ಆಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ (ಮೇ 18) ಗವಾಯಿ ಅವರು ತವರು ರಾಜ್ಯ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದರು. ಈ ವೇಳೆ ರಾಜ್ಯದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಅಥವಾ ನಗರ ಪೊಲೀಸ್ ಕಮೀಷನರ್ ತಮ್ಮನ್ನು ಸ್ವಾಗತಿಸಲು ಬರದೇ ಇರುವುದನ್ನು ಆಕ್ಷೇಪಿಸಿ, ಇದು ಶಿಷ್ಟಾಚಾರ ಉಲ್ಲಂಘನೆ ಎಂದು ಹೇಳಿದ್ದರು.
ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದು, ‘ಸಿಜೆಐ ಮಹಾರಾಷ್ಟ್ರ ಭೇಟಿ ವೇಳೆ ನಡೆದ ಶಿಷ್ಟಾಚಾರ ಉಲ್ಲಂಘನೆಗೆ ಸಂಬಂಧಿಸಿದಂತೆ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ. ಘಟನೆಗೆ ಸಂಬಂಧಪಟ್ಟ ಎಲ್ಲರೂ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ವಿಚಾರವನ್ನು ಅತಿಯಾಗಿ ರಂಜಿಸದೇ ಇರಲು ಸಿಜೆಐ ಮನವಿ ಮಾಡಿದ್ದಾರೆ’ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.