
ಸುಪ್ರೀಂ ಕೋರ್ಟ್
ನವದೆಹಲಿ: ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವವರು ನಿರ್ದಿಷ್ಟ ಸಮುದಾಯವನ್ನು ಧರ್ಮ, ಭಾಷೆ, ಜಾತಿ ಅಥವಾ ಪ್ರದೇಶದ ಆಧಾರದಲ್ಲಿ ಗುರಿ ಮಾಡಬಾರದು. ಸಾಮಾಜಿಕ ಏಕತೆ ಮತ್ತು ಸಾಮರಸ್ಯಕ್ಕೆ ಭ್ರಾತೃತ್ವ ಅತ್ಯಂತ ಮುಖ್ಯ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತು.
ಕ್ರೈಂ ಥ್ರಿಲ್ಲರ್ ಕಥಾಹಂದರವಿರುವ ‘ಘೂಸ್ಖೋರ್ ಪಂಡತ್’ ಸಿನಿಮಾವನ್ನು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಯನ್ನು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ವಿಚಾರಣೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮೇಲಿನಂತೆ ಪ್ರತಿಪಾದಿಸಿದರು.
ಸರ್ಕಾರ ಮತ್ತು ಇತರ ಸಂಘಸಂಸ್ಥೆಗಳೂ ಸೇರಿದಂತೆ ಯಾರೊಬ್ಬರೂ ಭಾಷಣ, ವ್ಯಂಗ್ಯಚಿತ್ರ ಅಥವಾ ದೃಶ್ಯ ಕಲೆಯ ಮೂಲಕ ಯಾವುದೇ ಸಮುದಾಯವನ್ನು ಹೀಗಳೆಯಬಾರದು, ಅವಹೇಳನ ಮಾಡಬಾರದು. ಇಂಥ ವರ್ತನೆ ಸಂವಿಧಾನಾತ್ಮಕವಾಗಿ ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿದರು.
ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ‘ಮಿಯಾ’ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಈ ರೀತಿ ಪ್ರತಿಪಾದಿಸಿದರು.
ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಭುಯಾನ್ ಅವರನ್ನು ಒಳಗೊಂಡ ನ್ಯಾಯಪೀಠವು, ಫೆ.19ರಂದು ನಿರ್ದೇಶಕ ನೀರಜ್ ಪಾಂಡೆ ಅವರ ಹೇಳಿಕೆಯನ್ನು ದಾಖಲಿಸಿಕೊಂಡು ಸಿನಿಮಾ ಬಿಡುಗಡೆಗೆ ತಡೆ ಕೋರಿದ್ದ ಅರ್ಜಿಯನ್ನು ಇತ್ಯರ್ಥಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.