ADVERTISEMENT

7 ರಾಜ್ಯಗಳಲ್ಲಿನ ವಿಧಾನಸಭೆ ಚುನಾವಣೆ ಮುಗಿದರೆ ಮತ್ತೆ ಇಂಧನ ದರ ಏರಿಕೆ: ಮಾಯಾವತಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 13:21 IST
Last Updated 9 ನವೆಂಬರ್ 2021, 13:21 IST
ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ
ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ   

ಲಖನೌ: ಇಂಧನ ದರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರುಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

‘ಪೆಟ್ರೋಲ್ ಮತ್ತು ಡೀಸೆಲ್ ದರವು ಕಳೆದ ಕೆಲವು ದಿನಗಳಿಂದ ದಾಖಲೆಯ ಮಟ್ಟದಲ್ಲಿ ಏರಿಕೆಯಾದ ರೀತಿ ಮತ್ತು ದೇಶದಲ್ಲಿ ಹಣದುಬ್ಬರಹೆಚ್ಚಾಗುತ್ತಿರುವ ಬಗೆಯನ್ನು ಜನರು ಅಷ್ಟು ಸುಲಭವಾಗಿ ಮರೆಯುವುದಿಲ್ಲ‘ ಎಂದು ಮಾಯಾವತಿ ಹೇಳಿದ್ದಾರೆ.

ಮುಂದುವರಿದು, ಸದ್ಯ ಯಾವೆಲ್ಲ ಉತ್ಪನ್ನಗಳ ಬೆಲೆ ಇಳಿಕೆ ಮಾಡಲಾಗಿದೆಯೋ ಅವು, ವಿವಿಧ ರಾಜ್ಯಗಳಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಮತ್ತೆ ಏರಿಕೆಯಾಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

‘ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಅವರು (ಕೇಂದ್ರ ಸರ್ಕಾರ) ಬೆಲೆ ಇಳಿಕೆ ಮಾಡಿದ್ದಾರೆ. ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಈ ಪಕ್ಷವು (ಬಿಜೆಪಿ) ಬೆಲೆ ಇಳಿಕೆ ನಿರ್ಧಾರವನ್ನು ಹಿಂಪಡೆಯಲಿದೆ. ಜನರು ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು‘ ಎಂದು ಮನವಿ ಮಾಡಿದ್ದಾರೆ.

2022ರಲ್ಲಿ ಗೋವಾ, ಮಣಿಪುರ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ.

403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಗೆ2017ರಲ್ಲಿ ನಡೆದ ಚುನಾವಣೆಯಲ್ಲಿ ಶೇ.39.67 ರಷ್ಟು ಮತಗಳನ್ನು ಪಡೆದುಕೊಂಡಿದ್ದ ಬಿಜೆಪಿ, ಬರೋಬ್ಬರಿ 312 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿತ್ತು.

ಉಳಿದಂತೆ ಸಮಾಜವಾದಿ ಪಕ್ಷ (ಎಸ್‌ಪಿ) 47 ಮತ್ತು ಬಿಎಸ್‌ಪಿ 19 ಸ್ಥಾನಗಳಲ್ಲಿ ಜಯ ಗಳಿಸಿದರೆ, ಕಾಂಗ್ರೆಸ್ ಕೇವಲ 7 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.