ADVERTISEMENT

ಪುದುಚೇರಿ: ಫೆ.22ರಂದು ವಿಶ್ವಾಸ ಮತ ಯಾಚನೆ ಪ್ರಕ್ರಿಯೆಗೆ ನೂತನ ಗವರ್ನರ್‌ ಆದೇಶ

ಏಜೆನ್ಸೀಸ್
Published 18 ಫೆಬ್ರುವರಿ 2021, 13:29 IST
Last Updated 18 ಫೆಬ್ರುವರಿ 2021, 13:29 IST
ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿರುವ ಡಾ. ತಮಿಳಿಸೈ ಸೌಂದರರಾಜನ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿರುವ ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ
ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿರುವ ಡಾ. ತಮಿಳಿಸೈ ಸೌಂದರರಾಜನ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿರುವ ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ   

ಪುದುಚೇರಿ: ಫೆ. 22ರಂದು ಸಂಜೆ 5 ಗಂಟೆಯ ಒಳಗೆ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿರುವ ಡಾ. ತಮಿಳಿಸೈ ಸೌಂದರರಾಜನ್ ಆದೇಶಿಸಿದ್ದಾರೆ.

ಪ್ರಸ್ತುತ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳು ತಲಾ 14 ಸದಸ್ಯರನ್ನು ಹೊಂದಿವೆ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರಿಗೆ ಫೆ.22ರಂದು ಬಹುಮತ ಸಾಬೀತು ಪಡಿಸಲೇಬೇಕಾದ ಅನಿವಾರ್ಯತೆ ಬಂದೊದಗಿದೆ.

ಕಾಂಗ್ರೆಸ್–ಡಿಎಂಕೆ ಮೈತ್ರಿಕೂಟ ಸರ್ಕಾರ ಅಲ್ಪಮತಕ್ಕೆ ಕುಸಿದಿರುವ ಕಾರಣ, ಬಿಜೆಪಿ ಆಪರೇಷನ್‌ ಕಮಲ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ADVERTISEMENT

ಕಳೆದ ಜನವರಿಯಲ್ಲಿ ಪುದುಚೇರಿಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದ್ದು 30 ಸ್ಥಾನಗಳ ಪೈಕಿ 23 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

2016ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 3, ಎಐಎಡಿಎಂಕೆ 7 ಸ್ಥಾನಗಳನ್ನು ಗೆದ್ದಿತ್ತು. ಈಗಾಗಲೇ ನಾಲ್ವರು ಕಾಂಗ್ರೆಸ್‌ ಶಾಸಕರನ್ನು ಸೆಳೆದಿರುವ ಬಿಜೆಪಿ, ಡಿಎಂಕೆ ಪಕ್ಷದ ಮುಖಂಡರಿಗೂ ಗಾಳ ಹಾಕಿದೆ ಎನ್ನಲಾಗಿದೆ. ಪ್ರಮುಖ ವಿರೋಧ ಪಕ್ಷವಾಗಿರುವ ಎಐಎಡಿಎಂಕೆ ಜೊತೆ ಬಿಜೆಪಿ ಈ ಸಲ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.