ಅಮಾನತು
ಪುಣೆ: ಇಲ್ಲಿನ ಸ್ವಾರ್ಗೇಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್ಆರ್ಟಿಸಿ) ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಸಾರಿಗೆ ನಿಗಮದ (ಎಂಎಸ್ಆರ್ಟಿಸಿ) ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆಯೇ?ಎಂಬುವುದನ್ನು ಖಚಿತಪಡಿಸಿಕೊಳ್ಳಲು ತನಿಖೆಗೆ ಆದೇಶಿಸಿದ್ದರು. ತನಿಖೆಯ ವರದಿ ಬಳಿಕ ನಿನ್ನೆ (ಮಂಗಳವಾರ) ವಿಧಾನಸಭೆಯಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಘೋಷಿಸಿದ್ದಾರೆ.
ಕರ್ತವ್ಯದ ವೇಳೆ ನಿರ್ಲಕ್ಷ್ಯ ತೋರಿದ ಆರೋಪದಡಿ ಹಿರಿಯ ಡಿಪೋ ವ್ಯವಸ್ಥಾಪಕ ಜಯೇಶ್ ಪಾಟೀಲ್, ಜೂನಿಯರ್ ಡಿಪೋ ವ್ಯವಸ್ಥಾಪಕ ಪಲ್ಲವಿ ಪಾಟೀಲ್, ಸಹಾಯಕ ಸಾರಿಗೆ ನಿರೀಕ್ಷಕ ಸುನಿಲ್ ಯೆಲೆ ಮತ್ತು ಸಹಾಯಕ ಸಾರಿಗೆ ಸೂಪರಿಂಟೆಂಡೆಂಟ್ ಮೋಹಿನಿ ಧಗೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ಕರ್ತವ್ಯ ಲೋಪ ಕಂಡುಬಂದರೂ ಇದೇ ರೀತಿಯ ಕ್ರಮ ಕೈಗೊಳ್ಳಲಾಗುವುದು. ಘಟನೆ ನಡೆದಾಗ ಕರ್ತವ್ಯದಲ್ಲಿದ್ದ 22 ಭದ್ರತಾ ಸಿಬ್ಬಂದಿಯನ್ನು ಬದಲಾಯಿಸಲಾಗಿದೆ ಎಂದು ಪ್ರತಾಪ್ ತಿಳಿಸಿದ್ದಾರೆ.
ಪುಣೆ ನಗರದ ಸ್ವಾರ್ಗೇಟ್ ಬಸ್ ನಿಲ್ದಾಣದ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಬಸ್ ಒಳಗಡೆ 26 ವರ್ಷದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದ ದತ್ತಾತ್ರೇಯ ರಾಮದಾಸ್ ಗಾಡೆಯನ್ನು ಬಂಧಿಸಲಾಗಿದೆ ಎಂದು ಪ್ರತಾಪ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.