ನವದೆಹಲಿ: ಮುಂದಿನ ವರ್ಷಾರಂಭದಲ್ಲಿ ಪಂಜಾಬ್ ಚುನಾವಣಾ ಅಖಾಡಕ್ಕಿಳಿಯಲು ಸಜ್ಜಾಗುತ್ತಿರುವಂತೆಯೇ, ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ (ಎಎಪಿ) ದೊಂದಿಗೆ ಯಾವುದೇ ರೀತಿಯ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಶಿರೋಮಣಿ ಅಕಾಲಿ ದಳದ (ಎಸ್ಎಡಿ) ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷ ಹೊಸ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಮೊದಲು ಕೇಂದ್ರದಲ್ಲಿ ಎನ್ಡಿಎ ಆಡಳಿತದ ಭಾಗವಾಗಿದ್ದ ಶಿರೋಮಣಿ ಅಕಾಲಿ ದಳವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕಿದೆ.
ಇದನ್ನೂ ಓದಿ:ಪಂಜಾಬ್: ಕೇಂದ್ರದ ಹೊಸ ಕೃಷಿ ಕಾನೂನಿನ ಪ್ರತಿಯನ್ನು ಸುಟ್ಟ ಪ್ರತಿಭಟನಾನಿರತ ರೈತರು
ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಹೊರತಾದ ಯಾವುದೇ ಪಕ್ಷಗಳ ಜೊತೆಗೆ ಮೈತ್ರಿ ನಡೆಸಲು ನಾವು ಸಿದ್ಧರಿದ್ದೇವೆ. ಈ ಪಕ್ಷಗಳೊಂದಿಗೆ ನಾವು ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ನಾವು ಮುಕ್ತರಾಗಿದ್ದೇವೆ. ಬಿಜೆಪಿಯೊಂದಿಗೆ ಹೊಂದಾಣಿಕೆ ನಡೆಸುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಂಜಾಬ್ನಲ್ಲಿ ವಿಧಾನಸಭಾ ಚುನಾವಣೆ ಅಖಾಡ ಕಾವೇರುತ್ತಿರುವಂತೆಯೇ ಬಾದಲ್ ಹೇಳಿಕೆ ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ.
ಕಾಂಗ್ರೆಸ್ ಆಡಳಿತದ ಸರ್ಕಾರವು ಕೋವಿಡ್ ಲಸಿಕೆ ವಿತರಣೆಯನ್ನು ಲಾಭದಾಯಕವಾಗಿಸಲು ಯತ್ನಿಸುತ್ತಿದೆ ಎಂಬುದಕ್ಕೆ ಸಂಬಂಧಿಸಿದಂತೆ ಗಂಭೀರವಾದ ಆರೋಪಗಳು ಕೇಳಿಬಂದಿವೆ. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸರ್ಕಾರವು ಕೋವಿಡ್ ಬಿಕ್ಕಟ್ಟನ್ನು ಸಮರ್ಥವಾಗಿ ನಿಭಾಯಿಸಲು ವಿಫಲವಾಗಿದೆ ಎಂಬ ದೂರು ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.