ADVERTISEMENT

ಧರಣಿಯಲ್ಲಿ ಮೃತಪಟ್ಟ ರೈತರ ಕುಟುಂಬದ ಒಬ್ಬ ಸದಸ್ಯನಿಗೆ ಪಂಜಾಬ್‌ ಸರ್ಕಾರದಿಂದ ನೌಕರಿ

ಏಜೆನ್ಸೀಸ್
Published 22 ಜನವರಿ 2021, 15:41 IST
Last Updated 22 ಜನವರಿ 2021, 15:41 IST
ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್
ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್   

ನವದೆಹಲಿ: ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಕಳೆದ ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಂಜಾಬ್‌ನ ರೈತರು ಮೃತಪಟ್ಟಿದ್ದಾರೆ. ಅವರ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ನೀಡುವುದಾಗಿ ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ತಿಳಿಸಿದ್ದಾರೆ.

ಈ ವಿಚಾರವಾಗಿ ಶುಕ್ರವಾರ ಹೇಳಿಕೆ ನೀಡಿರುವ ಅವರು, 'ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ 76 ರೈತರು ತೀರಿಕೊಂಡಿದ್ದಾರೆ ಎಂಬ ವರದಿ ನನಗೆ ಬಂದಿದೆ. ದೆಹಲಿ ಗಡಿಗಳಲ್ಲಿ ಮೃತಪಟ್ಟಿರುವ ಪಂಜಾಬ್‌ನ ರೈತರ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ನೀಡಲಾಗುವುದು' ಎಂದು ಘೋಷಿಸಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅಮರಿಂದರ್‌ ಸಿಂಗ್‌, 'ಈ ದೇಶದಲ್ಲಿ ಸಂವಿಧಾನವಿದೆಯೇ? ಸೆಡ್ಯೂಲ್‌ -7ರ ಅಡಿಯಲ್ಲಿ ಕೃಷಿಗೆ ಸಂಬಂಧಿಸಿದ ವಿಷಯಗಳು ರಾಜ್ಯ ಸರ್ಕಾರದ ಅಧೀನಕ್ಕೆ ಬರುತ್ತವೆ. ಸಂಸತ್ತಿನಲ್ಲಿ ಯಾವುದೇ ಚರ್ಚೆಯಿಲ್ಲದೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಏಕೆ ಬದಲಾಯಿಸಿತು? ಗೊಂದಲದ ನಡುವೆಯೇ ಹೊಸ ಕಾಯ್ದೆಗಳನ್ನು ಏಕೆ ಅಂಗೀಕರಿಸಲಾಯಿತು?' ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ಶುಕ್ರವಾರ ನಡೆದ 11ನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರೈತ ಮುಖಂಡರು ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳ ರದ್ದತಿಗೆ ಆಗ್ರಹಿಸಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳ ಸಾವಿರಾರು ರೈತರು ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.