ADVERTISEMENT

ಪಂಜಾಬ್‌ ಪ್ರವಾಹ: ಮುಖ್ಯಮಂತ್ರಿ, ರಾಜ್ಯಪಾಲರ ಜತೆ ಅಮಿತ್‌ ಶಾ ಮಾತುಕತೆ

ಪಿಟಿಐ
Published 1 ಸೆಪ್ಟೆಂಬರ್ 2025, 6:13 IST
Last Updated 1 ಸೆಪ್ಟೆಂಬರ್ 2025, 6:13 IST
   

ನವದೆಹಲಿ: ಭಾರಿ ಮಳೆಯಿಂದಾಗಿ ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಭಗವಂತ್‌ ಮಾನ್‌ ಮತ್ತು ರಾಜ್ಯಪಾಲ ಗುಲಾಬ್‌ ಚಂದ್‌ ಕಠಾರಿಯಾ ಅವರ ಜತೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್‌ನಲ್ಲಿನ ಪ್ರವಾಹ ಪರಿಸ್ಥಿತಿ ಹಾಗೂ ಜನರನ್ನು ರಕ್ಷಣೆ ಮಾಡಲು ಸರ್ಕಾರವು ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರು ದೂರವಾಣಿ ಕರೆಯಲ್ಲಿ ಅಮಿತ್‌ ಶಾ ಅವರಿಗೆ ಮಾಹಿತಿ ನೀಡಿದ್ದಾರೆ.

ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾಗಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಅಮಿತ್‌ ಶಾ ಅವರು ಆಶ್ವಾಸನೆ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಆಗಸ್ಟ್‌ ತಿಂಗಳಲ್ಲಿ ಪಂಜಾಬ್‌ನಲ್ಲಿ 253.7 ಮಿ.ಮೀ ಮಳೆಯಾಗಿದೆ. ಇದು ಕಳೆದ 25 ವರ್ಷಗಳಲ್ಲೇ ಅತಿ ಹೆಚ್ಚು ಮಳೆಯಾಗಿದ್ದು, ಸಾಮಾನ್ಯಕ್ಕಿಂತ ಶೇ 74 ರಷ್ಟು ಜಾಸ್ತಿ ಮಳೆಯಾಗಿದೆ. ಇದರಿಂದಾಗಿ ಪಂಜಾಬ್‌ನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಪಂಜಾಬ್‌ನ 1000ಕ್ಕೂ ಅಧಿಕ ಹಳ್ಳಿಗಳು ಮತ್ತು ಲಕ್ಷಾಂತರ ಜನರು ಪ್ರವಾಹದಿಂದ ತೊಂದರೆಗೊಳಗಾಗಿದ್ದಾರೆ’ ಎಂದು ಮುಖ್ಯಮಂತ್ರಿ ಮಾನ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಭಾರಿ ಮಳೆಯಿಂದಾಗಿ ಪಂಜಾಬ್‌ ಸರ್ಕಾರವು ಸೆ.3ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.