ಚಂಡೀಗಡ: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ಸೇರಿಸಲಾಗಿದ್ದ 15 ಲಕ್ಷ ಕುಟುಂಬಗಳಿಗೆ ಉಚಿತ ವಿಮಾ ಸೌಲಭ್ಯ ಒದಗಿಸಲು ಪಂಜಾಬ್ ಸರ್ಕಾರ ತೀರ್ಮಾನಿಸಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಸರ್ಕಾರದ ನಿರ್ಧಾರವನ್ನು ತಿಳಿಸಿದ್ದಾರೆ.
ಈಗಾಗಲೇ ಪಂಜಾಬ್ ವೈದ್ಯಕೀಯ ಹಾಜರಾತಿ ನಿಯಮಗಳ ಅಡಿಯಲ್ಲಿರುವ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಕುಟುಂಬಗಳನ್ನು ಹೊರತುಪಡಿಸಿ, ರಾಜ್ಯದಲ್ಲಿ ಸುಮಾರು 55 ಲಕ್ಷ ಕುಟುಂಬಗಳು ಯೋಜನೆಯ ವ್ಯಾಪ್ತಿಗೆ ಬರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಆರೋಗ್ಯ ಸೇವೆ ಒದಗಿಸಲು ಪ್ರತಿ ವರ್ಷ ₹593 ಕೋಟಿ ವೆಚ್ಚವನ್ನು ಭರಿಸಲಿದ್ದು, ಪ್ರತಿ ಕುಟುಂಬಕ್ಕೆ ₹5 ಲಕ್ಷ ವಿಮಾ ರಕ್ಷಣೆಯನ್ನು ಒದಗಿಸಲಿದೆ. ಇದರಿಂದಾಗಿ 55 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದ್ದು, ಪಲಾನುಭವಿಗಳು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಯೋಜನೆಯಿಂದ ಹೊರಗುಳಿದಿರುವ ಕುಟುಂಬಗಳನ್ನು ಗುರುತಿಸಿ, ಸೇರ್ಪಡೆಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.