ನವದೆಹಲಿ/ಡೆಹ್ರಾಡೂನ್: ಎರಡನೇ ಅವಧಿಗೆ ಶಾಸಕರಾಗಿರುವ, 45 ವರ್ಷದ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ರಾಜ್ಯ ವಿಧಾನಸಭೆಗೆ ನಿಗದಿತ ಅವಧಿಯಲ್ಲಿನಿಯಮಾನುಸಾರ ಆಯ್ಕೆಯಾಗದ ಕಾರಣ ಹಾಲಿ ಮುಖ್ಯಮಂತ್ರಿ ತೀರತ್ ಸಿಂಗ್ ರಾವತ್ ಅವರು ಶುಕ್ರವಾರ ರಾಜೀನಾಮೆಯನ್ನು ಸಲ್ಲಿಸಿದ್ದರು. ಹೀಗಾಗಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಧಾಮಿ ಆಯ್ಕೆಯಾಗಿದ್ದು, ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿಯಾಗಿ, ಸರ್ಕಾರ ರಚನೆಗೆ ತಮ್ಮ ಹಕ್ಕು ಪ್ರತಿಪಾದಿಸಲಿದ್ದಾರೆ.
ಧಾಮಿ ಅವರು ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರದಹಾಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ಆಪ್ತರು ಎಂದು ಹೇಳಲಾಗಿದೆ.
ವಿಧಾನಸಭೆಯಲ್ಲಿ ಖಾತಿಮಾ ಕ್ಷೇತ್ರವನ್ನು ಪ್ರತಿನಿಧಿಸುವ ಧಾಮಿ ಅವರು ವಿದ್ಯಾರ್ಥಿಯಾಗಿದ್ದಾಗ ಎಬಿವಿಪಿ ಜೊತೆಗೆ ಗುರುತಿಸಿಕೊಂಡಿದ್ದು, ಉತ್ತರಾಖಂಡದ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಉತ್ತರಾಖಂಡದ ಪಿತೋರಾಗರ್ ವಲಯದ ತುಂಡಿ ಅವರ ಹುಟ್ಟೂರು. ವೃತ್ತಿಯಿಂದ ವಕೀಲರು. 2000ರಲ್ಲಿ ಉತ್ತರಾಖಂಡ ರಾಜ್ಯ ಸ್ಥಾಪನೆಯಾದಾಗ ಸಕ್ರಿಯ ರಾಜಕಾರಣವನ್ನು ಪ್ರವೇಶಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.