ನವದೆಹಲಿ: ರಫೇಲ್ ಒಪ್ಪಂದ ಕುರಿತ ತೀರ್ಪುಗಳ ಪುನರ್ ಪರಿಶೀಲನೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳಿಗೆ ಉತ್ತರಿಸಲು ಕೇಂದ್ರ ಸರ್ಕಾರ ಸೋಮವಾರ ಕಾಲಾವಕಾಶ ಕೋರಿದೆ. ಈ ಅರ್ಜಿ ಪುರಸ್ಕರಿಸಿರುವ ಸುಪ್ರೀಂ ಕೋರ್ಟ್,ವಿಚಾರಣೆ ಮುಂದೂಡಿಕೆ ಕುರಿತು ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ.
ವಿಚಾರಣೆ ಮುಂದೂಡಿಕೆ ಕುರಿತು ಸುತ್ತೋಲೆ ಹೊರಡಿಸಬೇಕು ಹಾಗೂ ತೀರ್ಪು ಪುನರ್ಪರಿಶೀಲನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದವರಿಗೂ ಈ ಕುರಿತು ಮಾಹಿತಿ ನೀಡಬೇಕು ಎಂದೂ ಕೇಂದ್ರ ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಆರ್. ಬಾಲಸುಬ್ರಮಣಿಯನ್ ಅವರಿಗೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ಸೂಚಿಸಿದೆ. ಆದರೆ, ಮಂಗಳವಾರ ವಿಚಾರಣೆ ಮುಂದೂಡುವುದಕ್ಕೆ ಸಂಬಂಧಿಸಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮತ್ತೆ ಅಫಿಡವಿಟ್
ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಉಲ್ಲೇಖಿಸಿ ಮಾತನಾಡಿದ್ದಕ್ಕೆ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸುಪ್ರೀಂ ಕೋರ್ಟ್ಗೆ ಸೋಮವಾರ ಮತ್ತೊಂದು ಅಫಿಡವಿಟ್ ಸಲ್ಲಿಸಿದರು.
‘ಸುಪ್ರೀಂ ಕೋರ್ಟ್ ಕೂಡ ಮೋದಿಯನ್ನು ‘ಚೌಕೀದಾರ್ ಚೋರ್ ಹೈ’ ಎಂದಿದೆ’ ಎಂಬರ್ಥದಲ್ಲಿ ನೀಡಿದ್ದ ಹೇಳಿಕೆಗೆ ಮತ್ತೊಮ್ಮೆ ವಿಷಾದ
ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.