ADVERTISEMENT

ಪ್ರಿಯಾಂಕ ಗಾಂಧಿ ಮನವಿ ಮೇರೆಗೆ ಕಾಂಗ್ರೆಸ್‌ ಕಾರ್ಯದರ್ಶಿ ವಜಾ ಮಾಡಿದ ರಾಹುಲ್‌

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2019, 13:28 IST
Last Updated 21 ಫೆಬ್ರುವರಿ 2019, 13:28 IST
   

ನವದೆಹಲಿ: ಉತ್ತರಪ್ರದೇಶಕ್ಕೆ ಕಾಂಗ್ರೆಸ್‌ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಕುಮಾರ್‌ ಆಶಿಸ್‌ ಅವರನ್ನು ಪ್ರಿಯಾಂಕ ಗಾಂಧಿ ಮನವಿ ಮೇರೆಗೆ ಆ ಹುದ್ದೆಯಿಂದ ವಜಾ ಮಾಡಲಾಗಿದೆ.

ಕುಮಾರ್‌ ಆಶಿಸ್‌ ಮಂಗಳವಾರಕಾಂಗ್ರೆಸ್‌ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. 2005ರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದಡಿಯಲ್ಲಿ ಕುಮಾರ್‌ ಆಶಿಸ್‌ ಅವರನ್ನು ಬಿಹಾರ ಪೊಲೀಸರು ಬಂಧಿಸಿದ್ದರು. ಈ ಘಟನೆ ಬಳಿಕ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತ್ತೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು.

ಕುಮಾರ್‌ ಆಶಿಸ್‌ ಅವರ ನೇಮಕವನ್ನು ಆಕ್ಷೇಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಗಮನಿಸಿದ ಪ್ರಿಯಾಂಕ ಗಾಂಧಿ, ಕುಮಾರ್ ಆಶಿಸ್‌ ಅವರನ್ನು ಆ ಹುದ್ದೆಯಿಂದ ತೆಗೆದು ಹಾಕುವಂತೆ ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರ್ ಆಶಿಸ್‌ ಅವರನ್ನು ವಜಾಗೊಳಿಸಿ ಆ ಸ್ಥಾನಕ್ಕೆ ಸಚಿನ್ ನಾಯಕ್‌ ನೇಮಕ ಮಾಡಲಾಗಿದೆ.

ADVERTISEMENT

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಮತ್ತು ಜ್ಯೋತಿರಾದಿತ್ಯಾ ಸಿಂಧಿಯಾ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಿದೆ. ಈ ಎರಡು ತಂಡಗಳಿಗೂ 6 ಜನ ಕಾರ್ಯದರ್ಶಿಗಳನ್ನು ನೇಮಿಸಿದೆ. ಕುಮಾರ್‌ ಆಶಿಸ್‌ ಅವರನ್ನು ಪ್ರಿಯಾಂಕ ಗಾಂಧಿ ನೇತೃತ್ವದ ತಂಡಕ್ಕೆ ನೇಮಕ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.