
ಕೊಚ್ಚಿ: ಆರ್ಎಸ್ಎಸ್ ಮತ್ತು ಬಿಜೆಪಿಯು ಅಧಿಕಾರ ಕೇಂದ್ರೀಕರಣಕ್ಕೆ ಯತ್ನಿಸುತ್ತಿದೆ ಎಂದು ಲೋಕಸಭಾ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಆರೋಪಿಸಿದರು.
ಸ್ಥಳೀಯ ಸಂಸ್ಥೆಗೆ ಆಯ್ಕೆಯಾದ ಕಾಂಗ್ರೆಸ್ ಸದಸ್ಯರ ಜೊತೆ ಮಾತನಾಡಿದ ಅವರು, ‘ನಮ್ಮ ಪಕ್ಷವು ವಿಕೇಂದ್ರೀಕರಣ ಮತ್ತು ಪ್ರಜಾಪ್ರಭುತ್ವದ ತಳಹದಿಯನ್ನು ಗಟ್ಟಿಗೊಳಿಸುವುದರಲ್ಲಿ ನಂಬಿಕೆ ಇಟ್ಟಿದೆ. ಮೂರು ಸ್ತರಗಳ ಪಂಚಾಯತ್ರಾಜ್ ವ್ಯವಸ್ಥೆಯನ್ನು ಬಲಪಡಿಸಲು ಕಾಂಗ್ರೆಸ್ ಸಂವಿಧಾನಕ್ಕೆ 73ನೇ ಮತ್ತು 74ನೇ ತಿದ್ದುಪಡಿಯನ್ನು ತಂದಿತು’ ಎಂದು ಹೇಳಿದರು.
‘ಸ್ಥಳೀಯ ಸಂಸ್ಥೆಗಳ ಮೂಲಕ ಅನುಷ್ಠಾನಗೊಳ್ಳುತ್ತಿದ್ದ ಕಾರಣಕ್ಕಾಗಿ ಎನ್ಡಿಎ ಸರ್ಕಾರವು ನರೇಗಾದ ಮೇಲೆ ದಾಳಿ ಮಾಡಿದೆ’ ಎಂದು ಆರೋಪಿಸಿದರು.
‘ಮತದಾನದ ಹಕ್ಕು ಜನರ ಧ್ವನಿ ಎಂಬುವುದು ಸಂವಿಧಾನದ ಮೂಲ ಆಶಯ. ಈ ಹಕ್ಕನ್ನು ರಕ್ಷಿಸುವುದು ಅತ್ಯಗತ್ಯ. ಭಾರತದ ಜನರು ಧ್ವನಿ ಎತ್ತಬೇಕು ಎಂದು ಬಯಸುವ ಬದಲು ಬಿಜೆಪಿ ಮತ್ತು ಆರ್ಎಸ್ಎಸ್, ಭಾರತದ ಜನ ಅವರನ್ನು ಅನುಸರಿಸಬೇಕು ಎಂದು ಬಯಸುತ್ತಿದೆ’ ಎಂದರು.
‘ಬಿಜೆಪಿ ಮತ್ತು ಆರ್ಎಸ್ಎಸ್ನ ಸೈದ್ಧಾಂತಿಕ ದಾಳಿಯು ಎಲ್ಲರನ್ನು ಮೌನಗೊಳಿಸುವ ಉದ್ದೇಶವನ್ನು ಹೊಂದಿದೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.