ADVERTISEMENT

ರಾಜಸ್ಥಾನ: ಉದಯಪುರ ಹತ್ಯೆಗೆ ಕಾಂಗ್ರೆಸ್ ನಾಯಕ ರಾಹುಲ್‌, ಪ್ರಿಯಾಂಕಾ ತೀವ್ರ ಖಂಡನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜೂನ್ 2022, 16:12 IST
Last Updated 28 ಜೂನ್ 2022, 16:12 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ    

ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಿದ ಘಟನೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಖಂಡಿಸಿದ್ದಾರೆ.

ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು. ಕೃತ್ಯದ ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದ ದುಷ್ಕರ್ಮಿಗಳು ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

ಘಟನೆ ಕುರಿತು ಟ್ವೀಟ್ ಮಾಡಿರುವ ರಾಹುಲ್, ‘ಉದಯಪುರದಲ್ಲಿ ನಡೆದ ಭೀಕರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ ಕ್ರೌರ್ಯದ ಮೂಲಕ ಭಯೋತ್ಪಾದನೆ ಹರಡುವವರಿಗೆ ತಕ್ಷಣ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.

ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಹತ್ತಿಕ್ಕಬೇಕಿದೆ. ದಯವಿಟ್ಟು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.

‘ಉದಯಪುರದಲ್ಲಿ ನಡೆದ ಹಿಂಸಾತ್ಮಕ ಘಟನೆಯನ್ನು ನಾನು ಖಂಡಿಸುತ್ತೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸುತ್ತೇನೆ. ಧರ್ಮದ ಹೆಸರಿನಲ್ಲಿ ದ್ವೇಷ, ಹಿಂಸೆಯನ್ನು ಹರಡುವುದು ದೇಶ ಮತ್ತು ಸಮಾಜಕ್ಕೆ ಮಾರಕವಾಗಿದೆ. ನಾವು ಒಟ್ಟಾಗಿ ಶಾಂತಿ ಮತ್ತು ಅಹಿಂಸೆಗಾಗಿ ಶ್ರಮಿಸೋಣ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಇತ್ತ ಹತ್ಯೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.