ನವದೆಹಲಿ: ಗಡಿಯಿಂದ ಸೇನೆ ಹಿಂದೆ ಸರಿಯುವ ಸಂಬಂಧ ಭಾರತ–ಚೀನಾ ಸಮ್ಮತಿಸಿರುವ ಕುರಿತು ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಗಾಲ್ವನ್ ಕಣಿವೆಯ ಬಗ್ಗೆ ಪ್ರಸ್ತಾಪ ಇಲ್ಲ ಏಕೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಶ್ನಿಸಿದ್ದಾರೆ.
ಪೂರ್ವ ಲಡಾಖ್ನ ಗಡಿಯಲ್ಲಿನ ಪ್ರಕ್ಷುಬ್ಧ ಸ್ಥಿತಿಯನ್ನು ಶಮನಗೊಳಿಸುವ ಸಂಬಂಧ ಗಾಲ್ವನ್ ಕಣಿವೆಯಿಂದ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಗೆ ಚೀನಾ ಸೋಮವಾರ ಚಾಲನೆ ನೀಡಿದೆ. ಈ ವಿಷಯವಾಗಿ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ರಾಹುಲ್ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.
‘ಗಡಿಯಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣಗೊಳ್ಳುವುದಕ್ಕೂ ಮುಂಚಿನ ಸ್ಥಿತಿಯನ್ನೇ ಕಾಯ್ದುಕೊಳ್ಳುವಂತೆ ಕೇಂದ್ರ ಸರ್ಕಾರ ಯಾಕೆ ಆಗ್ರಹಿಸಲಿಲ್ಲ. ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯವಾದದ್ದು. ಇದನ್ನು ಕಾಪಾಡುವುದು ಭಾರತ ಸರ್ಕಾರದ ಕರ್ತವ್ಯ’ ಎಂದು ಅವರು ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ.
ಉಭಯ ದೇಶಗಳ ವಿದೇಶಾಂಗ ಸಚಿವರು ನೀಡಿರುವ ಹೇಳಿಕೆಗಳನ್ನು ಸಹ ಅವರು ತಮ್ಮ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.