ನವದೆಹಲಿ: ಅಯೋಧ್ಯೆವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಶನಿವಾರ ಪ್ರಕಟಿಸಿರುವ ತೀರ್ಪನ್ನುಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ. ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕು ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡಬೇಕು ಎಂದು ಅವರು ಹೇಳಿದ್ದಾರೆ.
ನಾವು ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡಬೇಕು. ಎಲ್ಲ ಭಾರತೀಯರು ಸಹೋದರತ್ವ, ನಂಬಿಕೆ ಮತ್ತು ಪ್ರೀತಿಯನ್ನು ಕಾಪಾಡಿಕೊಳ್ಳುವ ಸಮಯವಿದು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ದಶಕಗಳಿಗೂ ಹಳೆಯದಾದ ರಾಮ ಜನ್ಮಭೂಮಿ - ಬಾಬರಿ ಮಸೀದಿ ವಿವಾದಕ್ಕೆ ಇಂದು ತೆರೆ ಬಿದ್ದಿದೆ. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮತ್ತು ಮಸೀದಿ ನಿರ್ಮಾಣಕ್ಕೆ ಪರ್ಯಾಯ ಸ್ಥಳವನ್ನು ಒದಗಿಸುವಂತೆ ಆದೇಶಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ತೀರ್ಪು ಪ್ರಕಟಕ್ಕೂ ಮುನ್ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾಗಾಂಧಿ ಕೂಡ ಟ್ವೀಟ್ ಮಾಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು.
‘ಮಹಾತ್ಮ ಗಾಂಧಿಯವರ ಆದರ್ಶ ಮತ್ತು ಸಿದ್ಧಾಂತಗಳಿಗೆ ಎಲ್ಲರೂ ಬದ್ಧರಾಗಿರಬೇಕು. ಇದು ಮಹಾತ್ಮ ಗಾಂಧಿಯವರು ಬಾಳಿದ ದೇಶ. ಶಾಂತಿ ಮತ್ತು ಅಹಿಂಸೆಗೆ ಬದ್ಧರಾಗಿರುವುದು ನಮ್ಮ ಕರ್ತವ್ಯ’ ಎಂದು ಬರೆದಿದ್ದರು.
ಕಾಂಗ್ರೆಸ್ ಕೂಡ ತೀರ್ಪನ್ನು ಸ್ವಾಗತಿಸಿದ್ದು, ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ತೀರ್ಪನ್ನು ಕಾಂಗ್ರೆಸ್ ಗೌರವಿಸುತ್ತದೆ ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.