
ರಾಹುಲ್ ಗಾಂಧಿ
ಪಿಟಿಐ
ಭೋಪಾಲ್(ಮಧ್ಯ ಪ್ರದೇಶ): ಭಾರತ–ಅಮೆರಿಕ ವ್ಯಾಪಾರ ಒಪ್ಪಂದವು ಭಾರತೀಯ ರೈತರ ಹಿತಾಸಕ್ತಿಗಳಿಗೆ ವಿರುದ್ಧವಾಗಿದ್ದು, ಈ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರದ್ದುಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಆಗ್ರಹಿಸಿದ್ದಾರೆ.
ಇಲ್ಲಿ ನಡೆದ 'ಕಿಸಾನ್ ಮಹಾಚೌಪಾಲ್' ರೈತರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ‘ಇದು ಒಪ್ಪಂದವಲ್ಲ, ಬದಲಾಗಿ ದೇಶದ ರೈತರ ಹೃದಯಕ್ಕೆ ಹೊಡೆದ ಬಾಣ’ ಎಂದಿದ್ದಾರೆ.
‘ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಶಿವರಾಜ್ ಸಿಂಗ್ ಚೌಹಾಣ್ ಮತ್ತು ನಿತಿನ್ ಗಡ್ಕರಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.
ಮುಂದುವರಿದು, ‘ಎಪ್ಸ್ಟೈನ್ ಫೈಲ್ಸ್ ಭಯ ಮತ್ತು ಅದಾನಿಯನ್ನು ರಕ್ಷಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.
‘ಅಮೆರಿಕ ಸುಪ್ರೀಂ ಕೋರ್ಟ್ ಟ್ರಂಪ್ ಸುಂಕಗಳನ್ನು ರದ್ದುಗೊಳಿಸಿದ್ದು, ಪ್ರಪಂಚದಾದ್ಯಂತ ಹಲವು ದೇಶಗಳು ವ್ಯಾಪಾರದ ಬಗ್ಗೆ ಮರುಮಾತುಕತೆಗೆ ಮುಂದಾಗಿವೆ. ನೀವು ಯಾಕೆ ಮೌನವಾಗಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ‘ವ್ಯಾಪಾರ ಒಪ್ಪಂದವು ಕೇಂದ್ರ ಸರ್ಕಾರದ ಶರಣಾಗತಿಯನ್ನು ತೋರಿಸುತ್ತದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.