ನವದೆಹಲಿ: ಲೋಕಸಭೆ ಚುನಾವಣೆಯಲ್ಲಿನ ತೀವ್ರ ಹಿನ್ನಡೆಯಿಂದಾಗಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ದೃಢ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಹಿರಿಯ ನಾಯಕರಾದ ಅಹ್ಮದ್ ಪಟೇಲ್ ಮತ್ತು ಆಪ್ತರಾಗಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೊಂದಿಗೆ ಇಂದು ಸಭೆ ನಡೆಸಿರುವ ಅವರು, ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಬದಲಿಸುವುದಿಲ್ಲ ಎಂದು ರಾಹುಲ್ ಹೇಳಿರುವುದಾಗಿ ಮೂಲಗಳ ಮಾಹಿತಿ ಉಲ್ಲೇಖಿಸಿ ರಾಷ್ಟ್ರೀಯ ಸುದ್ದಿ ವಾಹಿನಿ ಎನ್ಡಿಟಿವಿ ತನ್ನ ವೆಬ್ಸೈಟ್ನಲ್ಲಿ ವರದಿ ಪ್ರಕಟಿಸಿದೆ.
ಅಧ್ಯಕ್ಷ ಸ್ಥಾನ ತ್ಯಾಗ ಮಾಡುವುದಾಗಿ ಈಗಾಗಲೇ ಪಕ್ಷದ ಪ್ರಮುಖರಿಗೆ ತಿಳಿಸಿರುವ ರಾಹುಲ್ ಗಾಂಧಿ ಅವರು ಸೋಮವಾರ ತಮ್ಮೆಲ್ಲ ಕಾರ್ಯಕ್ರಮಗಳನ್ನೂ ರದ್ದುಪಡಿಸಿಕೊಂಡರು. ತಮ್ಮನ್ನು ಭೇಟಿಯಾಗಲು ಬಂದ ನೂತನ ಸಂಸದರಿಗೂ ಅವರು ಅವಕಾಶ ನೀಡಿಲ್ಲ. ಈ ನಡುವೆ ಅಹ್ಮದ್ ಪಟೇಲ್ ಮತ್ತು ಕೆ.ಸಿ ವೇಣುಗೋಪಾಲ್ ಅವರೊಂದಿಗೆ ಸಮಾಲೋಚನೆ ನಡೆಸಿರುವ ಅವರು, ಸೂಕ್ತ ನಾಯಕತ್ವವನ್ನು ಹುಡುಕುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಸ್ಥಾನ ತ್ಯಾಗದ ನಿರ್ಧಾರದಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿಗೆ ತಾಯಿ ಸೋನಿಯಾ ಗಾಂಧಿ, ಸೋದರಿ ಪ್ರಿಯಾಂಕಾ ಗಾಂಧಿ ಮನವೊಲಿಸುವ ಪ್ರಯತ್ನ ಮಾಡಿದರಾದರೂ, ರಾಹುಲ್ ತಮ್ಮ ನಿಲುವು ಬದಲಿಸಿಲ್ಲ. ಹೀಗಾಗಿ ರಾಹುಲ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರಲು ಅವರೂ ಸಮ್ಮತಿಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.