
ರಾಹುಲ್ ಗಾಂಧಿ, ಪ್ರಧಾನಿ ಮೋದಿ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಾಗಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮೌನ ವಹಿಸಿರುವುದು ಏಕೆ? ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್ ಗಾಂಧಿ, ದೆಹಲಿಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ಆದರೆ ಮೋದಿ ಅವರು ಈ ಸಂಬಂಧ ಯಾವುದೇ ಕ್ರಮಕೈಗೊಂಡಿಲ್ಲ. ಸಂಸತ್ತಿನಲ್ಲಿ ಈ ಬಗ್ಗೆ ವಿವರವಾದ ಚರ್ಚೆ ನಡೆಸುವಂತೆ ಒತ್ತಾಯಿಸಿದ್ದಾರೆ.
’ನಾನು ಭೇಟಿ ಮಾಡುವ ಪ್ರತಿಯೊಬ್ಬ ತಾಯಿಯೂ ಹೇಳುವುದು ಒಂದೇ, ನನ್ನ ಮಗು ವಿಷಕಾರಿ ಗಾಳಿಯನ್ನು ಉಸಿರಾಡುತ್ತಾ ಬೆಳೆಯುತ್ತಿದೆ. ಇದರಿಂದ ಅವರು ದಣಿದಿದ್ದಾರೆ, ಹೆದರಿದ್ದಾರೆ ಹಾಗೂ ಕೋಪಗೊಂಡಿದ್ದಾರೆ' ಎಂದು ರಾಹುಲ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
'ಮೋದಿ ಅವರೇ, ನಿಮ್ಮ ಮುಂದೆಯೇ ದೇಶದ ಮಕ್ಕಳು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನೀವು ಏಕೆ? ಮೌನವಾಗಿದ್ದೀರಿ, ಏಕೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ, ನಿಮ್ಮ ಸರ್ಕಾರ ಏಕೆ ಇಷ್ಟು ಬೇಜವ್ದಾರಿತನ ಪ್ರದರ್ಶಿಸುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ ಕಳೆದ 15 ದಿನಗಳಿಂದ ಗಾಳಿಯ ಗುಣಮಟ್ಟ ಸೂಚ್ಯಂಕ ಕಳಪೆ ಮಟ್ಟಕ್ಕೆ ತಲುಪಿದ್ದು, ಮುಂದಿನ ಒಂದು ವಾರ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ.
ಉಸಿರಾಟ ಸಮಸ್ಯೆ ಇರುವವರು, ಮಕ್ಕಳು ಹಾಗೂ ಅಸ್ತಮಾ ರೋಗಿಗಳು ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.