ADVERTISEMENT

20 ಯೋಧರು ಹುತಾತ್ಮ | ಪ್ರಧಾನಿ ಮೋದಿ ಏಕೆ ಮೌನ ವಹಿಸಿದ್ದಾರೆ?: ರಾಹುಲ್ ಗಾಂಧಿ

ಏಜೆನ್ಸೀಸ್
Published 17 ಜೂನ್ 2020, 6:04 IST
Last Updated 17 ಜೂನ್ 2020, 6:04 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ   

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸೋಮವಾರ ರಾತ್ರಿ ಸಂಭವಿಸಿದ ಹಿಂಸಾಚಾರದ ಘರ್ಷಣೆಯ ಕುರಿತು ನರೇಂದ್ರ ಮೋದಿಯವರ ಮೌನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಈ ವಿಚಾರದಲ್ಲಿ ಮೋದಿ ಏಕೆ ಅಡಗಿ ಕುಳಿತಿದ್ದಾರೆ? ತಾಳ್ಮೆ ವಹಿಸಿದ್ದು ಸಾಕು, ಈಗ ಏನಾಗುತ್ತಿದೆ ಎಂಬುದನ್ನು ನಾವು ತಿಳಿಯಬೇಕಿದೆ. ನಮ್ಮ ಯೋಧರನ್ನು ಹತ್ಯೆ ಮಾಡಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಜಾಗವನ್ನು ವಶಪಡಿಸಿಕೊಳ್ಳಲು ಅವರಿಗೆ ಎಷ್ಟು ಧೈರ್ಯ? ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಚೀನಾದೊಂದಿಗೆ ಸೆಣಸಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಯೋಧರ ಕುರಿತು ನನಗಾಗುತ್ತಿರುವ ನೋವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಎಲ್ಲ ಪ್ರೀತಿಪಾತ್ರರಿಗೆ ಸಂತಾಪ ಸೂಚಿಸುತ್ತಿದ್ದೇನೆ. ಈ ಕಷ್ಟದ ಸಂದರ್ಭದಲ್ಲಿ ಹುತಾತ್ಮ ಯೋಧರ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ADVERTISEMENT

ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆ ಪ್ರದೇಶದ ಭಾರತ–ಚೀನಾ ವಾಸ್ತವ ಗಡಿ ರೇಖೆಯಲ್ಲಿ (ಎಲ್‌ಎಸಿ) ಭಾರತೀಯ ಸೇನೆಯೊಂದಿಗೆ ಸೋಮವಾರ ರಾತ್ರಿ ನಡೆಸಿದ ಹಿಂಸಾತ್ಮಕ ಸಂಘರ್ಷದಲ್ಲಿ ಭಾರತ ಸೇನೆಯ ಕರ್ನಲ್‌ ಬಿ. ಸಂತೋಷ್‌ ಬಾಬು, ಹವಾಲ್ದಾರ್‌ ಪಳನಿ ಮತ್ತು ಸಿಪಾಯಿ ಓಝಾ ಸೇರಿದಂತೆ ಗಂಭೀರವಾಗಿ ಗಾಯಗೊಂಡಿದ್ದ 17 ಯೋಧರು ಮೃತಪಟ್ಟಿದ್ದರು. ಈ ಮೂಲಕ ಸಂಘರ್ಷದಲ್ಲಿ ಭಾರತೀಯ ಸೇನೆಯ 20 ಮಂದಿ ಯೋಧರು ಹುತಾತ್ಮರಾಗಿರುವುದಾಗಿ ಸೇನೆ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.