ADVERTISEMENT

ರಾಹುಲ್ ಗಾಂಧಿ ಹೆಚ್ಚು ಜವಾಬ್ದಾರಿಯುತವಾಗಿ ಮಾತನಾಡಲಿ: ದತ್ತಾತ್ರೇಯ ಹೊಸಬಾಳೆ

ಐಎಎನ್ಎಸ್
Published 14 ಮಾರ್ಚ್ 2023, 11:33 IST
Last Updated 14 ಮಾರ್ಚ್ 2023, 11:33 IST
ದತ್ತಾತ್ರೇಯ ಹೊಸಬಾಳೆ
ದತ್ತಾತ್ರೇಯ ಹೊಸಬಾಳೆ   

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೆಚ್ಚು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಇತ್ತೀಚೆಗೆ ವಿದೇಶದಲ್ಲಿ ಭಾರತದ ಬಗ್ಗೆ ಹಾಗೂ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಎದ್ದಿರುವ ವಿವಾದದ ಬೆನ್ನಲ್ಲೇ ಹೊಸಬಾಳೆ ಅವರು ಈ ಹೇಳಿಕೆ ನೀಡಿದ್ದಾರೆ.

ಹರಿಯಾಣದಲ್ಲಿ ನಡೆದ ಅಖಿಲ ಭಾರತ ಪ್ರತಿನಿಧಿ ಸಭಾದ ಸಮಾರೋಪ ಸಮಾರಂಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ವಿಚಿತ್ರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಬೇಕು ಎನಿಸುವುದಿಲ್ಲ. ಆದರೆ, ಅವರು ಇದನ್ನೆಲ್ಲ ರಾಜಕೀಯ ದುರುದ್ದೇಶದಿಂದ ಮಾಡುತ್ತಿದ್ದಾರೆ ಎಂದು ಹೇಳಿದರು.

ADVERTISEMENT

ರಾಹುಲ್ ಗಾಂಧಿ ಅವರು ಇನ್ಮುಂದಾದರೂ ಮಾತನಾಡುವಾಗ ಹೆಚ್ಚು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಹೊಸಬಾಳೆ ಅವರು ಹೇಳಿದರು.

ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಾಂಸ್ಥಿಕ ಸಂಸ್ಥೆಗಳ ಮೇಲೆ ಭೀಕರ ದಾಳಿ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು.

ಕಲಾಪ ಮುಂದೂಡಿಕೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬ್ರಿಟನ್‌ ಪ್ರವಾಸದಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಮಾಡಿರುವ ಟೀಕೆಯು ಸಂಸತ್ತಿನಲ್ಲಿ ಮಂಗಳವಾರವೂ ತೀವ್ರ ಕೋಲಾಹಲ ಎಬ್ಬಿಸಿದ್ದು, ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಲಾಯಿತು. ರಾಜ್ಯಸಭೆಯಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಸದಸ್ಯರ ನಡುವೆ ಇದೇ ವಿಷಯವಾಗಿ ಗದ್ದಲವಾಗಿದ್ದರಿಂದ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.