ಮುಂಬೈ: ಮುಂಬೈನಲ್ಲಿ ಸತತ ಎರಡನೇ ದಿನವೂ ಮಳೆಯಬ್ಬರ ಮುಂದುವರಿದಿದ್ದು, ಶುಕ್ರವಾರಕ್ಕೆ ಹೋಲಿಸಿದರೆ ಶನಿವಾರ ಮಳೆ ಪ್ರಮಾಣ ಕಡಿಮೆ ಇತ್ತು ಎಂದು ಅಧಿಕಾರಿಗಳು ತಿಳಿಸಿದರು.
ಭಾರತೀಯ ಹವಾಮಾನ ಇಲಾಖೆ ಅನ್ವಯ ಶನಿವಾರ ಬೆಳಗ್ಗೆ 8.30ರಿಂದ ಮಧ್ಯಾಹ್ನ 2.30ರವರೆಗೆ 39.4 ಮಿ.ಮೀ. ಮಳೆ ದಾಖಲಾಗಿದ್ದು, ತಗ್ಗು ಪ್ರದೇಶಗಳಾದ ಸಾಯನ್ ಮತ್ತು ಮಿಲನ್ ಸಬ್ವೇನಲ್ಲಿ ನೀರು ನುಗ್ಗಿದೆ. 19 ಕಡೆ ಮರಗಳು, ರೆಂಬೆ ಕೊಂಬೆಗಳು ಮುರಿದು ಬಿದ್ದಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದರು.
169 ಮಿ.ಮೀ. ಭಾರಿ ಮಳೆ: ಶುಕ್ರವಾರ ಬೆಳಗ್ಗೆ 8.30ರಿಂದ 24 ಗಂಟೆ ಅವಧಿಯಲ್ಲಿ 169 ಮಿ.ಮೀ. ಮಳೆ ದಾಖಲಾಗಿದೆ. ಶನಿವಾರ ಮುಂಬೈ, ರತ್ನಗಿರಿ, ರಾಯ್ಗಡ್ನಲ್ಲಿ ಭಾರಿ ಮಳೆ ಮುನ್ಸೂಚನೆ ಇದ್ದ ಕಾರಣ ‘ರೆಡ್ ಅಲರ್ಟ್’ ಘೋಷಿಸಲಾಗಿತ್ತು.
ಪ್ರವಾಹ ಪರಿಹಾರಕ್ಕೆ ತಂಡಗಳು ಸನ್ನದ್ಧ (ನವದೆಹಲಿ ವರದಿ): ‘ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ದೇಶದ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) 90 ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಕೋವಿಡ್–19 ಕಾರಣದಿಂದ ಈ ತಂಡಗಳು ಎಲ್ಲ ಅಗತ್ಯ ಮುನ್ನೆಚ್ಚರಿಕೆ ವಹಿಸಲಿವೆ’ ಎಂದು ಎನ್ಡಿಆರ್ಎಫ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಗೃಹಸಚಿವ ಅಮಿತ್ ಶಾ ಶುಕ್ರವಾರ ತಮ್ಮ ಕಚೇರಿಯಲ್ಲಿ ಮಳೆ ಮತ್ತು ಪ್ರವಾಹ ನಿರ್ವಹಣೆಗೆ ಸಿದ್ಧತೆಗಳ ಕುರಿತು ಪರಿಶೀಲಿಸಿದರು. ಸಂಭವನೀಯ ಹಾನಿ ತಡೆಗೆ ವಿಸ್ತೃತ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.