ನವದೆಹಲಿ:ರಾಜಸ್ಥಾನದ ವಜಾಗೊಂಡ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ 18 ಶಾಸಕರ ಅನರ್ಹತೆ ಪ್ರಕ್ರಿಯೆಯಲ್ಲಿಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ರಾಜಸ್ಥಾನ ಹೈಕೋರ್ಟ್ ಜುಲೈ 24ರಂದು ನೀಡಿರುವ ಆದೇಶ ಪ್ರಶ್ನಿಸಿ ರಾಜಸ್ಥಾನ ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ಶುಕ್ರವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಧಾನಸಭೆ ಅಧ್ಯಕ್ಷ ಸಿ.ಪಿ.ಜೋಶಿ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ ಎರಡು ದಿನದ ಬಳಿಕ ಮಹೇಶ್ ಜೋಶಿ ಅರ್ಜಿ ಸಲ್ಲಿಸಿದ್ದಾರೆ. ವಕೀಲ ವರುಣ್ ಚೋಪ್ರಾ ಅವರ ಮುಖಾಂತರ ಅರ್ಜಿ ಸಲ್ಲಿಸಿರುವ ಜೋಶಿ, ‘ಈ ಆದೇಶ ಅಸಾಂವಿಧಾನಿಕ ಹಾಗೂ ಅಕ್ರಮವಾಗಿದ್ದು, 1992ರಲ್ಲಿ ಕಿಹೊಟೊ ಹೊಲೊಹನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶಕ್ಕೆ ವಿರುದ್ಧವಾಗಿದೆ’ ಎಂದು ಉಲ್ಲೇಖಿಸಿದ್ದಾರೆ. 1992ರ ಆದೇಶದ ಅನ್ವಯ ‘ಅನರ್ಹತೆ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ವಿಧಾನಸಭೆ ಅಧ್ಯಕ್ಷರಿಗಿದ್ದು, ಈ ಪ್ರಕ್ರಿಯೆಯಲ್ಲಿ ನ್ಯಾಯಾಂಗ ಮಧ್ಯಪ್ರವೇಶಿಸುವುದಕ್ಕೆ ಅನುಮತಿ ಇಲ್ಲ’ ಎಂದು ತಿಳಿಸಲಾಗಿದೆ.
ಹೈಕೋರ್ಟ್ ಆದೇಶಕ್ಕೆ ತಡೆ ಕೋರಿ ಸಿ.ಪಿ.ಜೋಶಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ‘ಹೈಕೋರ್ಟ್ ಆದೇಶ ಅಸಾಂವಿಧಾನಿಕವಾಗಿದ್ದು, ಸಭಾಧ್ಯಕ್ಷರ ಅಧಿಕಾರಕ್ಕೆ ಚ್ಯುತಿ ಉಂಟಾಗಿದೆ’ ಎಂದು ಉಲ್ಲೇಖಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.