ADVERTISEMENT

ಟೈಲರ್‌ ಹತ್ಯೆ ಖಂಡಿಸಿದ ರಾಜಸ್ಥಾನ ಸರ್ವಪಕ್ಷ ಸಭೆ: ₹ 50 ಲಕ್ಷ ಪರಿಹಾರ ಘೋಷಣೆ

ಪಿಟಿಐ
Published 30 ಜೂನ್ 2022, 2:41 IST
Last Updated 30 ಜೂನ್ 2022, 2:41 IST
ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌
ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌   

ಜೈಪುರ: ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ ಕನ್ಹಯ್ಯ ಲಾಲ್‌ ಅವರನ್ನು ಕತ್ತು ಸೀಳಿ ಹತ್ಯೆ ಮಾಡಿದ ಕೃತ್ಯವನ್ನು ವಿಧಾನಸಭೆಯ ಸರ್ವಪಕ್ಷ ಸದಸ್ಯರು ಕಟುವಾಗಿ ಖಂಡಿಸಿದ್ದಾರೆ. ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ಕನ್ಹಯ್ಯ ಅವರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಗೆಹಲೋತ್‌ ಅವರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ, ಇದೊಂದು ಭಯೋತ್ಪಾದನೆಯ ಕೃತ್ಯ. ಹಂತಕರಿಗೆ ಅಂತರರಾಷ್ಟ್ರೀಯ ಉಗ್ರ ಸಂಘಟನೆಗಳ ಜೊತೆಗಿರುವ ಸಂಬಂಧಗಳ ಬಗ್ಗೆ ತನಿಖೆ ನಡೆಸಬೇಕು. ವಿಳಂಬಿಸದೆ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ಶಾಂತಿ ಮತ್ತು ಸಂಯಮ ಕಾಪಾಡುವಂತೆ ಮನವಿ ಮಾಡಲಾಗಿದೆ.

ADVERTISEMENT

ಘಟನೆಗೆ ಸಂಬಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ವು ತನಿಖೆ ನಡೆಸುತ್ತಿದೆ. ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಮತ್ತು ರಾಜಸ್ಥಾನ ಪೊಲೀಸ್‌ ಇಲಾಖೆಯ ವಿಶೇಷ ಕಾರ್ಯಾಚರಣಾ ತಂಡ (ಎಸ್‍‌ಒಜಿ)ವು ಎನ್‌ಐಎ ಜೊತೆ ತನಿಖೆಗೆ ಸಹಕರಿಸುತ್ತಿವೆ ಎಂದು ಗೆಹಲೋತ್‌ ಹೇಳಿದ್ದಾರೆ.

ರಿಯಾಜ್‌ ಅನ್ಸಾರಿ ಮತ್ತು ಗೌಸ್‌ ಮಹ್ಮದ್‌ ಎಂಬುವವರು ಪ್ರವಾದಿ ಮಹಮ್ಮದ್‌ ಅವರ ಅವಹೇಳನ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ವಕ್ತಾರೆಯಾಗಿದ್ದ ನೂಪುರ್‌ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದರು ಎಂಬ ಕಾರಣಕ್ಕೆ ಟೈಲರ್‌ ಕನ್ಹಯ್ಯ ಅವರ ಶಿರಚ್ಛೇದ ಮಾಡಿದ್ದರು. ನಂತರ ಕನ್ಹಯ್ಯ ಹತ್ಯೆಯ ಹೊಣೆ ಹೊತ್ತುಕೊಂಡು, 'ಇದು ಇಸ್ಲಾಂಗೆ ಅವಮಾನ ಮಾಡಿದ್ದಕ್ಕೆ ಪ್ರತೀಕಾರ' ಎಂಬ ಹೇಳಿಕೆಯಿರುವ ವಿಡಿಯೊವನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.