ADVERTISEMENT

ಯಾರ ಒತ್ತಡವೂ ನನ್ನ ಮೇಲಿಲ್ಲ :ರಾಜಸ್ಥಾನದ ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ

ರಾಜಸ್ಥಾನದ ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಹೇಳಿಕೆ

ಪಿಟಿಐ
Published 30 ಜುಲೈ 2020, 20:42 IST
Last Updated 30 ಜುಲೈ 2020, 20:42 IST
ಕಲ್‌ರಾಜ್‌
ಕಲ್‌ರಾಜ್‌   

ನವದೆಹಲಿ: ‘ನನ್ನ ಪಾಲಿಗೆ ಸಂವಿಧಾನವೇ ಸರ್ವೋಚ್ಚ. ನನ್ನ ಮೇಲೆ ಯಾರ ಒತ್ತಡವೂ ಇಲ್ಲ’ ಎಂದು ರಾಜಸ್ಥಾನದ ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಹೇಳಿದ್ದಾರೆ.

ರಾಜ್ಯಪಾಲರು ಕೇಂದ್ರ ಸರ್ಕಾರದ ಅಡಿಯಾಳಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್‌ ಶಾಸಕರ ಟೀಕೆಗೆ ಪ್ರತಿಕ್ರಿಯಿಸಿರುವ ಅವರು, ‘ನಾನು ಯಾವತ್ತೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ. ಸರ್ಕಾರವೂ ಸಂವಿಧಾನ ಬದ್ಧವಾಗಿಯೇ ಕೆಲಸ ಮಾಡಬೇಕೆಂದು ಬಯಸುತ್ತೇನೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಅನೇಕ ನಿರ್ದೇಶನಗಳನ್ನು ನೀಡುತ್ತಾ ಬಂದಿದ್ದೇನೆ. ಅಧಿವೇಶನಕ್ಕೆ ಅನುಮತಿ ಕೋರಿ 21 ದಿನಗಳ ಮುಂಚೆಯೇ ನೋಟಿಸ್‌ ನೀಡಬೇಕು. ಆ ನಿಯಮವನ್ನೂ ಪಾಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದೆ’ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

‘ಸಂವಿಧಾನಾತ್ಮಕ ಹುದ್ದೆಯಲ್ಲಿದ್ದುಕೊಂಡು ಕಾಂಗ್ರೆಸ್‌ ಶಾಸಕರು ರಾಜಭವನದ ಒಳಗೆ ಪ್ರತಿಭಟನೆ ನಡೆಸಿದ್ದು ನೋವಿನ ಸಂಗತಿ. ಇದು ಉತ್ತಮ ಬೆಳವಣಿಗೆಯಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

‘ರಾಜ್ಯದ ಪ್ರತಿಯೊಬ್ಬ ನಾಗರಿಕರ ಹಿತ ಕಾಯುವುದು ರಾಜ್ಯ ಸರ್ಕಾರದ ಕರ್ತವ್ಯ. ಈಗ ಎಲ್ಲೆಡೆಯೂ ಕೋವಿಡ್‌ ಬಿಕ್ಕಟ್ಟು ಸೃಷ್ಟಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಜನರಲ್ಲಿ ಮೂಡಿರುವ ಭಯದ ವಾತಾವರಣ ದೂರ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.